ಉಡುಪಿ: ಕುಂದಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ನಾಲ್ಕು ಮಂಗಗಳ ಶವ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ ಹರಡಿದೆ.
ಸಿದ್ದಾಪುರ ವ್ಯಾಪ್ತಿಯಲ್ಲಿ 2, ಹೊಸಂಗಡಿಯಲ್ಲಿ 1, ಶೀರೂರಿನಲ್ಲಿ 1 ಮಂಗಗಳ ಶವ ಪತ್ತೆಯಾಗಿದೆ. ಮಂಗಗಳ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ದೇಹದ ಭಾಗವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳಹಿಸಲಾಗಿದೆ. ಮಂಗನಕಾಯಿಲೆ ಎಂದು ದೃಢಪಟ್ಟಿಲ್ಲ ಎಂದು ಡಿಎಚ್ಒ ರೋಹಿಣಿ ‘ಪ್ರಜಾವಾಣಿ’ಗೆ ತಿಳಿಸಿದರು.
ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಗ್ರಾಮಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕುಂದಾಪುರ ಹಾಗೂ ಕಾರ್ಕಳ ತಾಲ್ಲೂಕಿನ ವೈದ್ಯಾಧಿಕಾರಿಗಳಿಗೆ ಮಂಗನ ಕಾಯಿಲೆ ತಡೆ ಕುರಿತು ತರಬೇತಿ ನೀಡಲಾಗಿದೆ. ಕಾಡಿನಂಚಿನ ಗ್ರಾಮಗಳಲ್ಲಿ ಮಂಗಗಳ ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದರು.
ಗ್ರಾಮಸ್ಥರಿಗೆ ಕಾಡಿಗೆ ತೆರಳದರಿರಲು ಸೂಚಿಸಲಾಗಿದೆ. ಜಾನುವಾರುಗಳನ್ನು ಕಾಡಿನೊಳಗೆ ಮೇಯಿಸಲು ಕರೆದೊಯ್ಯದಂತೆ ಎಚ್ಚರಿಕೆ ನೀಡಲಾಗಿದೆ. ಜತೆಗೆ ಮಂಗನಕಾಯಿಲೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಕೆಎಂಸಿಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮಂಗನಕಾಯಿಲೆಗೆ ಚಿಕಿತ್ಸೆ ಪಡೆಯಲು ಬರುತ್ತಿರುವ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ 57 ಶಂಕಿತ ಮಂಗನ ಕಾಯಿಲೆ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 19 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ನಾಲ್ವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಗನ ಕಾಯಿಲೆಯಿಂದ ಯಾರೂ ಮೃತಪಟ್ಟಿಲ್ಲ ಎಂದು ಕೆಎಂಸಿ ಆಸ್ಪತ್ರೆ ಮೂಲಗಳು ತಿಳಿಸಿವೆ.