ಉಡುಪಿ: ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಅವರಿಗೆ ಶನಿವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಮಾಹೆ ಸಹ ಕುಲಪತಿ ಡಾ.ನಾರಾಯಣ ಸಭಾಹಿತ್ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ, ಸಾಹಿತಿ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಅಧ್ಯಾಪನ ನಿರಂತರ ಪ್ರಕ್ರಿಯೆಯಾಗಿದ್ದು ಬರವಣಿಗೆ ಹಾಗೂ ಅಧ್ಯಾಪನ ಒಟ್ಟಾಗಿ ಸಾಗಿದರೆ ಅವರವರ ಕ್ಷೇತ್ರದಲ್ಲಿ ಛಾಪು ಬರಲಿದೆ ಎಂದರು.
ಬರವಣಿಗೆ ಬದುಕಿನ ಭಾಗವಾಗಬೇಕು. ಬರವಣಿಗೆಯ ನೈತಿಕತೆ ಉಳಿಸಿಕೊಳ್ಳಬೇಕು, ಕಾಲಕ್ಕೆ ತಕ್ಕಂತೆ ಅಧ್ಯಯನ ಕ್ರಮವೂ ಬದಲಾಗುತ್ತಿರಬೇಕು. ಇದರಿಂದ ವಿವಿಧ ಕ್ಷೇತ್ರಗಳ ಬಗ್ಗೆ ಜ್ಞಾನ ಲಭಿಸುತ್ತದೆ ಎಂದು ಸಲಹೆ ನೀಡಿದರು.
ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಪಂಡಿತ ಪರಂಪರೆಗೆ ಪ್ರಸಿದ್ಧಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆೆಯಲ್ಲಿ ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನದ ಅರಿವು ವಿಸ್ತಾರವಾಗುತ್ತದೆ ಎಂದರು.
ಇದೇ ಸಂದರ್ಭ ಮುಳಿಯ ಗೋಪಾಲಕೃಷ್ಣ ಭಟ್ ಅವರ ‘ದೊಡ್ಡವರ ಸಣ್ಣ ಕಥೆಗಳು’ ಕೃತಿಯನ್ನು ಮುಳಿಯ ರಘುರಾಮ ಭಟ್ ಬಿಡುಗಡೆ ಮಾಡಿದರು. ಮುಳಿಯ ರಾಘವಯ್ಯ ಕೃತಿ ಪರಿಚಯ ಮಾಡಿದರು.
ಪ್ರಶಸ್ತಿ ಆಯ್ಕೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋರಮಾ ಎಂ.ಭಟ್, ಲೇಖಕಿ ಬಿ.ಶಶಿಲೇಖಾ, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಇದ್ದರು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ ಬಿ.ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಜಿಎಂ ಕಾಲೇಜಿನ ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಜಿಎಂ ಕಾಲೇಜು, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.