ಉಡುಪಿ: ‘ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿರುವುದು ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಿದೆ’ ಎಂದು ಶ್ರೀರಾಮ ಸೇನೆ ಮಂಗಳೂರು ವಿಭಾಗದ ಅಧ್ಯಕ್ಷ ಮೋಹನ್ ಭಟ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುತಾಲಿಕ ರಾಜಕೀಯ ಪ್ರವೇಶಿಸುವ ನಿರ್ಧಾರದ ಹಿಂದೆ ಕಾರ್ಕಳದ ಉದ್ಯಮಿ ವಿವೇಕಾನಂದ ಶೆಣೈ ಅವರ ಕುಮ್ಮಕ್ಕಿದೆ. ವೈಯಕ್ತಿಕ ದ್ವೇಷಕ್ಕಾಗಿ ಮುತಾಲಿಕ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿದರು.
‘ಕೆಲ ತಿಂಗಳುಗಳಿಂದ ಪ್ರಮೋದ್ ಮುತಾಲಿಕ ಅವರು ಸಂಘಟನೆಯ ಹಿರಿಯ ನಾಯಕರು, ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಪ್ರವಾಸದ ಸಂದರ್ಭದಲ್ಲೂ ಜಿಲ್ಲಾಧ್ಯಕ್ಷರಿಗೆ ತಿಳಿಸುತ್ತಿಲ್ಲ. ಈ ನಡೆ ಕಾರ್ಯಕರ್ತರಿಗೆ ತೀವ್ರ ನೋವು ತಂದಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಅವರು ಹಿಂದೆ ಸರಿಯಬೇಕು’ ಎಂದರು.
ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರು ಮುತಾಲಿಕ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.