ಗುರುವಾರ ನಸುಕಿನ 1.30ರ ವೇಳೆಗೆ ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಜೋಡುಕಟ್ಟೆಗೆ ಆಗಮಿಸಿದ ಪುತ್ತಿಗೆ ಶ್ರೀಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಅಲ್ಲಿಂದ ಜೋಡುಕಟ್ಟೆಗೆ ಆಗಮಿಸಿದ ಅವರು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿದರು. ಅವರನ್ನು ಮೆರವಣಿಗೆಯಲ್ಲಿ ರಥಬೀದಿಗೆ ಕರೆದೊಯ್ಯಲಾಯಿತು.
ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಮಾಡಿದ ಅವರು ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವಾಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕೃಷ್ಣ ಮಠ ಪ್ರವೇಶಿಸಿದ ಅವರು ಅಕ್ಷಯ ಪಾತ್ರೆಯನ್ನು ಸ್ವೀಕರಿಸಿ ಸರ್ವಜ್ಞ ಪೀಠವನ್ನು ಏರಿದರು. ಆ ಮೂಲಕ ಪುತ್ತಿಗೆ ಸುಗುಣೇಂದ್ರ ಸ್ವಾಮೀಜಿ ಅವರು ನಾಲ್ಕನೇ ಪರ್ಯಾಯ ಆರಂಭಿಸಿದರು. ಎರಡು ವರ್ಷಗಳ ಕಾಲ ಕೃಷ್ಣನ ಪೂಜಾ ಕೈಂಕರ್ಯ, ಕೃಷ್ಣಮಠದ ಉಸ್ತುವಾರಿಯನ್ನು ಪುತ್ತಿಗೆ ಶ್ರೀ ನಿಭಾಯಿಸುವರು.