ಉಡುಪಿ: ಮಲ್ಪೆಯಿಂದ ಸುವರ್ಣ ತ್ರಿಭುಜ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಚಂದ್ರಶೇಖರ್ ಕೋಟ್ಯಾನ್ ಹಾಗೂ ದಾಮೋದರ್ ಸಾಲ್ಯಾನ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮೀನುಗಾರಿಕಾ ಇಲಾಖೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಸುವರ್ಣ ತ್ರಿಭುಜ ಬೋಟ್ ದುರಂತವಾಗಿರುವದನ್ನು ನೌಕಾಪಡೆ ಅಧಿಕಾರಿಗಳು ಖಚಿತ ಪಡಿಸಿರುವ ಹಿನ್ನೆಲೆಯಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.
ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ್, ‘ಚಂದ್ರಶೇಖರ್ ಕೋಟ್ಯಾನ್ ಹಾಗೂ ಧಾಮೋದರ್ ಸಾಲ್ಯಾನ್ ಕುಟುಂಬದ ವಾರಸುದಾರರ ವಿವರ ಹಾಗೂ ಬ್ಯಾಂಕ್ ಖಾತೆಯ ವಿವರವನ್ನು ಮೀನುಗಾರಿಕಾ ನಿರ್ದೇಶನಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಪರಿಹಾರಕ್ಕೆ ಮರಣ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳು ಕಡ್ಡಾಯ. ಆದರೆ, ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣವನ್ನುವಿಶೇಷ ಎಂದು ಪರಿಗಣಿಸಿ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ನಾಪತ್ತೆಯಾದ ಬೋಟ್ನ ದಾಖಲಾತಿಗಳು, ಮೀನುಗಾರರ ವಿವರ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಕಳುಹಿಸಲಾಗಿದೆ ಎಂದರು.