ಉಡುಪಿ: ನಗರದ ಶಾಂಭವಿ ಲಾಡ್ಜ್ನಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಸಂತೋಷ್ ಪಾಟೀಲ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದ್ದು, ಅವರ ಜತೆಗಿದ್ದ ಇಬ್ಬರು ಸ್ನೇಹಿತರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಎಸ್ಪಿ ಎನ್.ವಿಷ್ಣುವರ್ಧನ್ ತಿಳಿಸಿದರು.
ಸಂತೋಷ್ ಪಾಟೀಲ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿನೀಡಿ 3 ತಾಸಿಗೂ ಹೆಚ್ಚು ಕಾಲ ಎಸ್ಪಿ ಮಾಹಿತಿ ಕಲೆಹಾಕಿದರು. ಬಳಿಕ ಮಾತನಾಡಿ ‘ಮಂಗಳೂರಿನಿಂದ ಎಫ್ಎಸ್ಎಲ್ ತಜ್ಞರ ತಂಡ ಉಡುಪಿಗೆ ಬರಲಿದೆ. ಮೃತ ಸಂತೋಷ್ ಪಾಟೀಲ್ ಸಂಬಂಧಿಗಳು ಕೂಡ ಉಡುಪಿಗೆ ಬರುತ್ತಿದ್ದು, ಎಲ್ಲರೂ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಸಂತೋಷ್ ಪಾಟೀಲ್ ಇದ್ದ ಕೊಠಡಿಯನ್ನು ಸೀಲ್ ಮಾಡಲಾಗಿದೆ. ಉಡುಪಿಯಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಂತೋಷ್ ಪಾಟೀಲ್ ಯಾರು?: ಮೃತ ಸಂತೋಷ್ ಪಾಟೀಲ್ ಬೆಳಗಾವಿ ಜಿಲ್ಲೆಯ ಹಿಂಡಲಗ ಗ್ರಾಮದವರಾಗಿದ್ದು ಗುತ್ತಿಗೆದಾರ ಹಾಗೂ ಬಿಜೆಪಿ ಮುಖಂಡರಾಗಿದ್ದರು. ಈಚೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶೇ 40 ಪರ್ಸೆಂಟ್ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಮಾಡಿದ್ದರು.
ಸೋಮವಾರ ವಾಟ್ಸ್ಆ್ಯಪ್ನಲ್ಲಿಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರಿಗೆ ಸಂದೇಶ ರವಾನಿಸಿ ನಾಪತ್ತೆಯಾಗಿದ್ದರು. ಸಂತೋಷ್ ಪಾಟೀಲ ಅವರ ಮೊಬೈಲ್ ಲೊಕೇಷನ್ ಆಧಾರದ ಮೇಲೆ ಪೊಲೀಸರು ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಲಾಡ್ಜ್ಗಳಲ್ಲಿ ತಪಾಸಣೆ ನಡೆಸಿದಾಗ ಶಾಂಭವಿ ಲಾಡ್ಜ್ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ವಾಟ್ಸ್ಆ್ಯಪ್ ಸಂದೇಶ:'ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ. ಸಚಿವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿ, ಮುಖ್ಯಮಂತ್ರಿ , ಬಿ.ಎಸ್. ಯಡಿಯೂರಪ್ಪ ಸಹಾಯ ಮಾಡಬೇಕು'. ಗೆಳೆಯರಾದ ಸಂತೋಷ್ ಹಾಗೂ ಹಾಗೂ ಪ್ರಶಾಂತ್ ಎಂಬುವರನ್ನೂ ಜತೆಯಲ್ಲಿ ಕರೆದುಕೊಂಡು ಬಂದಿದ್ದು, ಅವರಿಗೂ ನನ್ನ ಸಾವಿಗೂ ಸಂಬಂಧವಿಲ್ಲ ಎಂದು ಸಂತೋಷ್ ಪಾಟೀಲ್ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ.
ಇವುಗಳನ್ನೂ ಓದಿ..
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.