ಉಡುಪಿ: ಗಾಂಜಾ ಮಾರಾಟ ಪ್ರಕರಣದ ಆರೋಪಿ ಅರ್ಫನ್ಗೆ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 30,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ 6 ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.
ಸೆ.5, 2019ರಂದು ಆರೋಪಿ ಅರ್ಫನ್ನಿಂದ ಪೊಲೀಸರು 1 ಕೆ.ಜಿ 48 ಗ್ರಾಂ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು. ಅಂದಿನ ಸೆನ್ ಠಾಣೆ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ದೂರಿನಂತೆ ಪಿಎಸ್ಐ ಲಕ್ಷ್ಮಣ ದೋಷಾರೋಪಣಾ ಪಟ್ಟಿಯನ್ನು ಸಿದ್ಧಪಡಿಸಿದ್ದರು.
ಪ್ರಾಸಿಕ್ಯೂಶನ್ ಪರವಾಗಿ ಶಾಂತಿಬಾಯಿ ವಾದ ಮಂಡಿಸಿದ್ದರು. ಗಾಂಜಾ ಪ್ರಕರಣದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಗ್ಗೆ ಎಸ್ಪಿ ಅಕ್ಷಯ್ ಎಂ.ಹಾಕೆ ಇಲಾಖೆಯ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.