ಉಡುಪಿ: ಜಿಲ್ಲೆಯಲ್ಲಿ ಇದುವರೆಗೂ 820 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಇವರೆಲ್ಲರೂ 14 ದಿನಗಳ ಹೋಂ ಕ್ವಾರಂಟೈನ್ನಲ್ಲಿರಲಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ 207 ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಗೆ ಮುಂಬೈ ಸೇರಿದಂತೆ ಇತರೆ ರಾಜ್ಯಗಳಿಂದ ಬರುತ್ತಿರುವವರನ್ನು ಹೋಂ ಕ್ವಾರಂಟೈನ್ ಮಾಡಿ ಮನೆಯನ್ನು ಸೀಲ್ಡೌನ್ ಮಾಡಲಾಗುತ್ತಿದೆ. ಹಾಗಾಗಿ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದರು.
ಹೋಂ ಕ್ವಾರಂಟೈನ್ ಮನೆಗಳಿಗೆ ಯಾರೂ ಭೇಟಿ ನೀಡಬಾರದು. ಹೋಂ ಕ್ವಾರಂಟೈನ್ನಲ್ಲಿರುವವರು ಹೊರಬಂದರೆ ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಇಬ್ಬರಿಗೆ ಕೋವಿಡ್ ಸೋಂಕು:
ಸೋಮವಾರ ಇಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಮುಂಬೈನಿಂದ ಎರಡು ದಿನಗಳ ಹಿಂದೆ ಜಿಲ್ಲೆಗೆ ಬಂದಿದ್ದ ಒಬ್ಬರಲ್ಲಿ ಹಾಗೂ ಸೋಂಕಿತ ಲ್ಯಾಬ್ ಟೆಕ್ನಿಷಿಯನ್ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.