ಉಡುಪಿ: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಕೋವಿಡ್ನಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಅವರು, ಕುಟುಂಬದೊಂದಿಗೆ ನಗರದಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. 2020 ರ ನ. 24 ರಂದು ಉಡುಪಿ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು.
ಪಡುಬಿದ್ರೆ ಬೀಚ್ ಬ್ಲೂ ಪ್ಲಾಗ್ ಅಂತರ ರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಸಾಕಷ್ಟು ಶ್ರಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ಸರ್ಕಾರಿ ಕೆಲಸಕ್ಕೆ ಸೇರುವ ಮುನ್ನ ಪತ್ರಕರ್ತರಾಗಿ ಕೆಲಸ ಮಾಡಿದ್ದರು.
'ಅತ್ಯಂತ ನಿಷ್ಠೆಯ ಸಹೋದ್ಯೋಗಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಅವರನ್ನು ಕಳೆದುಕೊಂಡು ಹೃದಯ ಭಾರವಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ' ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.