ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಕುಮ್ರಗೋಡಿನಲ್ಲಿ ಈಚೆಗೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪತಿಯೇ ಸುಪಾರಿ ಕೊಟ್ಟು ಪತ್ನಿಯನ್ನು ಕೊಲೆ ಮಾಡಿಸಿರುವುದು ತನಿಖೆಯಲ್ಲಿ ಬಯಲಾಗಿದೆ.
ಪ್ರಕರಣದಲ್ಲಿ ಪತಿ ರಾಮಕೃಷ್ಣ ಗಾಣಿಗನನ್ನು ಪೊಲೀಸರು ಬಂಧಿಸಿದ್ದು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಜುಲೈ 23ರವರೆಗೆ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.
ಪ್ರಕರಣದಲ್ಲಿ ಸುಪಾರಿ ಕಿಲ್ಲರ್ಗಳು ಭಾಗಿಯಾಗಿದ್ದು, ಒಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ.
ಆರೋಪಿ ರಾಮಕೃಷ್ಣ ಗಾಣಿಗನನ್ನು ನ್ಯಾಯಾಲಯದಿಂದ ಕರೆದೊಯ್ಯುತ್ತಿರುವ ಪೊಲೀಸರು
ಪ್ರಕರಣದ ವಿವರ: ಜು.12ರಂದು ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿದ್ದ ವಿಶಾಲ ಅವರನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿತ್ತು. ವಿಶಾಲ ಅವರ ಮೈಮೇಲಿದ್ದ ಚಿನ್ನಾಭರಣವನ್ನು ದೋಚಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಬ್ರಹ್ಮಾವರ ಠಾಣೆ ಪೊಲೀಸರು ಪತಿ ರಾಮಕೃಷ್ಣ ಗಾಣಿಗನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಪತಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಅಂಶ ಬಯಲಾಯಿತು.
ಪತಿ ಪತ್ನಿಯ ನಡುವೆ ಇದ್ದ ವೈಮನಸ್ಸು ಕೊಲೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.