ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮಿಷ ಪ್ರಭಾವಗಳಿಗೆ ಮಣಿಯದೆ ಯೋಗ್ಯರಿಗೆ ಮತ ಹಾಕಿ

ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜೆ.ಎನ್. ಸುಬ್ರಹ್ಮಣ್ಯ ಸಲಹೆ
Last Updated 25 ಜನವರಿ 2021, 15:08 IST
ಅಕ್ಷರ ಗಾತ್ರ

ಉಡುಪಿ: ಚುನಾವಣೆಯ ಸಂದರ್ಭ ಮತದಾರರು, ಅಭ್ಯರ್ಥಿಗಳ ಆಮಿಷಗಳಿಗೆ ಬಲಿಯಾಗದೆ ಪ್ರಾಮಾಣಿಕವಾಗಿ ಮತ್ತು ನ್ಯಾಯಸಮ್ಮತವಾಗಿ ಮತ ಚಲಾಯಿಸಿ, ಚುನಾವಣೆಯ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜೆ.ಎನ್. ಸುಬ್ರಹ್ಮಣ್ಯ ಸಲಹೆ ನೀಡಿದರು.

ಸೋಮವಾರ ನಗರದ ಪುರಭವನದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮತದಾನ ಮಾಡಲು ಅರ್ಹತೆ ಪಡೆದವರೆಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಮತದಾನ ಮಾಡಲು ಆಮಿಷ ನೀಡುವವರ ಕುರಿತು ಎಚ್ಚರದಿಂದ ಇರಬೇಕು. ಯಾವುದೇ ಒತ್ತಡ, ಆಮಿಷ, ಪ್ರಭಾವಗಳಿಗೆ ಒಳಗಾಗದೆ ಪ್ರಾಮಾಣಿಕತೆಯಿಂದ ಅಮೂಲ್ಯ ಮತ ಚಲಾಯಿಸಿ, ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಚುನಾವಣೆಯಲ್ಲಿ ಹಣ ಹಂಚುವುದನ್ನು ತಡೆಯುವ ನಿಟ್ಟಿನಲ್ಲಿ ಚುನಾವಣೆಗಿಂತ ಕನಿಷ್ಠ 2 ವರ್ಷ ಮುಂಚೆ ಹಣ ಸಂಗ್ರಹ ಮಾಡುವವರ ಕುರಿತು ನಿಗಾವಹಿಸಿದರೆ ಮತದಾರರಿಗೆ ಅಕ್ರಮ ಹಣ ವಿತರಣೆ ಮಾಡುವುದನ್ನು ತಡೆಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಾವೇರಿ ಮಾತನಾಡಿ, ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಚಲಾಯಿಸಿ. ಪ್ರಜಾಪ್ರಭುತ್ವದ ಯಶಸ್ಸಿಗೆ ಚುನಾವಣೆ ಅಗತ್ಯವಾಗಿದ್ದು, ಮತದಾನದಿಂದ ಉತ್ತಮ ಜನಪ್ರತಿನಿಧಿಗಳ ಆಯ್ಕೆಯ ಮೂಲಕ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ 10,16,660 ಮತದಾರರಿದ್ದು, ಈ ವರ್ಷ 20,000 ಯುವ ಮತದಾರರನ್ನು ಸೇರ್ಪಡೆ ಮಾಡುವ ಗುರಿ ಹೊಂದಲಾಗಿದೆ. ಕೊರೊನಾದಿಂದ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳದ ಹಿನ್ನಲೆಯಲ್ಲಿ 9,702 ಯುವ ಮತದಾರರ ಸೇರ್ಪಡೆಯಾಗಿದೆ.

18 ವರ್ಷ ತುಂಬಿದವರೆಲ್ಲೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಅರ್ಹರಿದ್ದು, ಜಿಲ್ಲೆಯ ಕಾಲೇಜುಗಳಿಗೆ ಕೂಡಲೇ ಮತದಾರರ ಪಟ್ಟಿ ಸೇರ್ಪಡೆ ಕುರಿತು ಅರ್ಜಿ ಫಾರಂಗಳನ್ನು ಕಳುಹಿಸಲಾಗುವುದು. ಎಲ್ಲ ವಿದ್ಯಾರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವುದರ ಜೊತೆಗೆ, ನೆರೆ ಹೊರೆಯವರನ್ನೂ ಸೇರ್ಪಡೆ ಮಾಡಿಸಿ. ಚುನಾವಣೆ ಸಂದರ್ಭದಲ್ಲಿ ಹಣ, ಜಾತಿ, ಭಾಷೆ, ಧರ್ಮದ ಆಮಿಷಗಳಿಗೆ ಬಲಿಯಾಗದೇ ಸಮರ್ಥ ವ್ಯಕ್ತಿಗೆ ಮತ ಚಲಾಯಿಸಿ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಡಿಡಿಪಿಐ ಎನ್.ಎಚ್.ನಾಗೂರ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಯುವ ಮತದಾರರಿಗೆ ಎಪಿಕ್ ಕಾರ್ಡ್ ವಿತರಿಸಲಾಯಿತು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT