ಚಿಕ್ಕಮಗಳೂರು: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯ ಕೈಗೊಳ್ಳಲು ಇದೇ 28ರಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲಿದ್ದಾರೆಂದು ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರೇಮಗಳೂರಿನಲ್ಲಿ ಮಧ್ಯಾಹ್ನ 2ಗಂಟೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಪಕ್ಷದ ಅಭ್ಯರ್ಥಿ ಎಲ್ಲ ಬ್ಲಾಕ್ಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇದೇ 24ರಂದು ನಗರದ ಕೆ.ಎಂ. ರಸ್ತೆಯ ಗುತ್ತಿಗೆದಾರರ ಕಟ್ಟಡದಲ್ಲಿ ಕೊಠಡಿಯಲ್ಲಿ ಪಕ್ಷದ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಅಭಯಚಂದ್ರ ಜೈನ್ ಉದ್ಘಾಟಿಸುತ್ತಿದ್ದು, ಅದೇ ದಿನ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ನಡೆಯಲಿದೆ ಎಂದರು.
ಪಕ್ಷದ ಶಿಸ್ತು ಉಲ್ಲಂಘಿಸಿದ್ದ ಕೆಲವರನ್ನು ಈಗಾಗಲೇ ಅಮಾನತುಪಡಿಸಿದ್ದು, ಅವರ ಅಮಾನತು ಆದೇಶ ಹಿಂದಕ್ಕೆ ಪಡೆದು, ಚುನಾವಣಾ ಪ್ರಚಾರ ಕಾರ್ಯದಲ್ಲಿ ಅವರನ್ನು ತೊಡಗಿಸಿಕೊಳ್ಳಲಾಗುವುದು. ವೈಯಕ್ತಿಕ ಕಾರಣಕ್ಕೆ ಶೃಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೌಭಾಗ್ಯ ಅವರು ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕರಿಸಲಾಗಿದೆ. ಆ ಸ್್ಥಾನಕ್ಕೆ ನಟರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಶೃಂಗೇರಿ ಬ್ಲಾಕ್ನಲ್ಲಿ ಸೌಭಾಗ್ಯ ಸೇರಿದಂತೆ 10 ಜನರ ಸಮಿತಿ ಪ್ರಚಾರ ಕಾರ್ಯಕ್ಕೆ ನಿಯೋಜಿಸಲಾಗಿದೆ. ಅವರು ಈಗಾಗಲೇ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆಂದು ಹೇಳಿದರು.
ಜಿಲ್ಲಾ ವಕ್ತಾರ ಎ.ಎನ್.ಮಹೇಶ್ ಮಾತನಾಡಿ, ಜಾತ್ಯತೀತ ನಿಲುವನ್ನು ಹೊಂದಿರುವ ಸಿಪಿಐ ಮುಖಂಡರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ಕುರಿತು ಆ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
ಅಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಲಾಭ ಪಡೆಯಲು ವಿರೋಧ ಪಕ್ಷಗಳು ಮುಂದಾಗಿವೆ. ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶಗಳಿಗೆ ಎಂದು ಈಗಾಗಲೇ ಕಾಂಗ್ರೆಸ್ ಪಕ್ಷ ಪ್ರಮಾಣ ಪತ್ರ ಸಲ್ಲಿಸಿದೆ ಎಂದು ಹೇಳುತ್ತಿರುವ ಅವರು ಪ್ರಮಾಣ ಪತ್ರವನ್ನು ಜನರ ಮುಂದೆ ಪ್ರಕಟಪಡಿಸಲಿ ಎಂದು ಒತ್ತಾಯಿಸಿದರು.
ಕುಡಿಯುವ ನೀರಿನ ಸಮಸ್ಯೆ ಬಯಲು ಪ್ರದೇಶದಲ್ಲಿ ತಲೆದೋರಿದ್ದರೂ ಸಮಸ್ಯೆಗೆ ಸಚಿವರು ಸ್ಪಂದಿಸುತ್ತಿಲ್ಲ ಎಂದು ತಿಳಿಸಿದಾಗ, ಸಚಿವರೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯೆ ಗಾಯತ್ರಿಶಾಂತೇಗೌಡ ಇದೇ ಸಂದರ್ಭ ಉತ್ತರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್, ನಗರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಅಕ್ಬರ್, ಎಪಿಎಂಸಿ ಸದಸ್ಯ ಭದ್ರೇಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.