ಕಾರವಾರ: ‘ಕೊರಚ, ಕೊರಮ, ಬೋವಿ, ಲಂಬಾಣಿ ಸಮುದಾಯಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡುವ ಪ್ರಸ್ತಾವವನ್ನು ತಿರಸ್ಕರಿಸಬೇಕು. ಈ ಸಂಬಂಧ ಮುಖ್ಯಮಂತ್ರಿಗೆ ರಾಜ್ಯದಾದ್ಯಂತ 6 ಲಕ್ಷದಿಂದ 8 ಲಕ್ಷ ಪತ್ರಗಳನ್ನು ಬರೆದು ಕಳುಹಿಸಲಾಗುವುದು’ ಎಂದು ಬಿ.ಜೆ.ಪಿ ಎಸ್.ಸಿ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಉದಯ ಎನ್ ಬಶೆಟ್ಟಿ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಹೊರಗಿಡುವಂಥೆ ಕೆಲವರು ಪ್ರಭಾವಿಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇದರ ವಿಚಾರಣೆಯು ತನ್ನ ವ್ಯಾಪ್ತಿಗೆ ಬಾರದ ಕಾರಣ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೆ ಅರ್ಜಿ ಸಲ್ಲಿಸಲು ಸೂಚಿಸಿತು. ಅದರಂತೆ ಈ ಜಾತಿಗಳನ್ನು ಪಟ್ಟಿಯಿಂದ ಕೈಬಿಡುವ ಬಗ್ಗೆ ಅಭಿಪ್ರಾಯ ತಿಳಿಸಲು ಆಯೋಗವು ರಾಜ್ಯ ಸರ್ಕಾರಕ್ಕೆ ತಿಳಿಸಿದೆ’ ಎಂದರು.
‘ಈ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದುಕೆಲವು ಮುಖಂಡರು ವಿವಿಧೆಡೆ ಸುದ್ದಿಗೋಷ್ಠಿ ಮಾಡಿದ್ದಾರೆ. ಈ ರೀತಿ ಅಪಪ್ರಚಾರ ಮಾಡುತ್ತ, ದಲಿತರಲ್ಲಿ ಭಿನ್ನಾಭಿಪ್ರಾಯ ಹಾಗೂ ವೈಮನಸ್ಸು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಲಂಬಾಣಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ನಾಯಕ, ಭೋವಿ ಸಮಾಜದ ಜಿಲ್ಲಾ ಘಟಕದಅಧ್ಯಕ್ಷ ಭರಮಪ್ಪ ಕಟ್ಟಿಮನಿ, ಎಸ್.ಸಿ ಮೋರ್ಚಾ ಕಾರವಾರ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ ವಡ್ಡರ, ಮುಖಂಡರಾದ ವೆಂಕಟೇಶ ಕಟ್ಟಿಮನಿ, ಫಕೀರಪ್ಪ ಕಟ್ಟಿಮನಿ, ನಾಗರಾಜ ರುಣದ ಇದ್ದರು.