ಶಿರಸಿ: ಸರ್ವಾಂಗೀಣ ಅಭಿವೃದ್ಧಿಯ ಪರಿಕಲ್ಪನೆಯೊಂದಿಗೆ ಮುಖ್ಯಮಂತ್ರಿ ಬಜೆಟ್ ಮಂಡಿಸಿದ್ದಾರೆ. ಉತ್ತರ ಕನ್ನಡದ ಘಟ್ಟದ ಮೇಲಿನ ಭಾಗಕ್ಕೆ ನಿರ್ದಿಷ್ಟ ಯೋಜನೆ ಇಲ್ಲ ಎಂದಾಕ್ಷಣ ಅಭಿವೃದ್ಧಿಗೆ ಹಿನ್ನಡೆ ಎಂದು ಭಾವಿಸಬೇಕಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಇಲ್ಲಿ ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಅಭಿವೃದ್ಧಿಗೆ ಯೋಜನೆಗಳನ್ನು ಸಚಿವ ಸಂಪುಟದಲ್ಲೂ ಅನುಮೋದನೆ ಪಡೆದುಕೊಳ್ಳಬಹುದು. ಬಜೆಟ್ನಲ್ಲಿ ಮಾತ್ರವೇ ಯೋಜನೆಗಳ ಘೋಷಣೆಯಾಗಬೇಕು ಎಂಬುದಿಲ್ಲ. ಜಿಲ್ಲೆಯ ಒಟ್ಟಾರೆ ಅಭಿವೃದ್ಧಿಗೆ ತೊಡಕು ಉಂಟಾಗದಂತೆ ಸರ್ಕಾರ ನೆರವು ಒದಗಿಸಲಿದೆ’ ಎಂದರು.
‘ಪ್ರವಾಸೋದ್ಯಮ, ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಯಿಂದ ಕರಾವಳಿ ಭಾಗಕ್ಕೆ ಒತ್ತು ನಿಡಲಾಗಿದೆ. ಇದು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆಯಾಗಲಿದೆ’ ಎಂದರು.
‘ಕಾಳಿ ನದಿ ನೀರನ್ನು ಉತ್ತರ ಕರ್ನಾಟಕ ಭಾಗಕ್ಕೆ ಹರಿಸುವ ಯೋಜನೆಯ ಸ್ವರೂಪದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಸಾಧಕ ಬಾಧಕಗಳ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.