ಬೆಂಗಳೂರು: ‘ಬಿಜೆಪಿ ನಡೆಸುತ್ತಿರುವ ಚುನಾವಣಾ ಪ್ರಚಾರದಿಂದ ಕಂಗೆಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೇರೆ ಕ್ಷೇತ್ರದ ಕಡೆ ಮುಖ ಮಾಡಿದ್ದಾರೆ. ಅವರ ಸೋಲು ನಿಶ್ಚಿತ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಾರ್ವಜನಿಕರ ಅಭಿಪ್ರಾಯ ಪಡೆದು ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುವ ‘ನವ ಕರ್ನಾಟಕ ಜನಪರ ಶಕ್ತಿ ಅಭಿಯಾನ’ಕ್ಕೆ ಶುಕ್ರವಾರ ಅವರು ಚಾಲನೆ ನೀಡಿದರು.
‘ಉತ್ತರ ಪ್ರದೇಶದ ಮಾದರಿಯಲ್ಲಿಯೇ ಕರ್ನಾಟಕದಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಅಧಿಕಾರಕ್ಕೆ ಬಂದಾಗ ಏನು ಮಾಡುತ್ತೇವೆ ಎಂಬುದು ಮುಖ್ಯವಲ್ಲ. ಅಧಿಕಾರಕ್ಕೂ ಮುನ್ನ ಜನರ ಆಶೋತ್ತರಗಳು ಏನು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ’ ಎಂದು ಹೇಳಿದರು.