ಕಾರವಾರ:ಈ ತಿಂಗಳ 15ರ ನಂತರ ವಿದೇಶಗಳಿಂದ ಭಟ್ಕಳಕ್ಕೆ ವಾಪಸಾದವರನ್ನು ಪ್ರತ್ಯೇಕ ಕ್ವಾರಂಟೈನ್ ಸೌಲಭ್ಯದಲ್ಲಿ ಇಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕುಟುಂಬದ ಮತ್ತಷ್ಟು ಸದಸ್ಯರ ಜೊತೆ ಸಂಪರ್ಕವುಂಟಾಗಿ ಕೊರೊನಾ ವೈರಸ್ ಹರಡದಂತೆ ತಡೆಯಲು ಈ ತೀರ್ಮಾನಕ್ಕೆ ಬರಲಾಗಿದೆ.
ಕೋವಿಡ್ 19 ಪೀಡಿತರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನೂ ಈಗಾಗಲೇ ಸರ್ಕಾರ ಗುರುತಿಸಿರುವ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡಲಾಗಿದೆ. ಜಿಲ್ಲಾಡಳಿತದ ಈ ಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.
ಸಮೀಕ್ಷೆ ಆರಂಭ: ಈ ನಡುವೆ,ಕೊರೊನಾ ವೈರಸ್ ಹರಡುವುದನ್ನುತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮನೆ ಮನೆ ಸಮೀಕ್ಷೆ ಆರಂಭಿಸಿದೆ. ಭಾನುವಾರ ಬೆಳಿಗ್ಗೆಯಿಂದಲೇ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಪ್ರತಿ ಮನೆಯಲ್ಲಿ ಜ್ವರದಿಂದ ಬಳಲುತ್ತಿರುವವರು ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಿರುವವರು, ಇತ್ತೀಚಿಗೆ ವಿದೇಶ ಪ್ರವಾಸ ಮಾಡಿ ಬಂದವರು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಸಮೀಕ್ಷೆಯ ವೇಳೆಜ್ವರದಿಂದ ಬಳಲುತ್ತಿರುವವರು ಕಂಡುಬಂದರೆ ಅವರನ್ನು ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವಿದೇಶದಿಂದ ಬಂದವರ ಆರೋಗ್ಯವನ್ನು ಪ್ರತಿ ದಿನ ತಪಾಸಣೆ ಮಾಡಲಾಗುತ್ತದೆ.