ಶಿರಸಿ: ದೇಶದ ವಿವಿಧ ಭಾಗಗಳಲ್ಲಿ ಬಂಧನಕ್ಕೊಳಗಾಗಿದ್ದ ಉಗ್ರರ ಜೊತೆ ನಂಟು ಹೊಂದಿರುವ ಸಂಶಯದ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶಿರಸಿಗೆ ಸಮೀಪವಿರುವ ಗ್ರಾಮದ ಯುವಕರೊಬ್ಬರ ವಿಚಾರಣೆ ನಡೆಸಿದರು.
ಇಬ್ಬರು ಅಧಿಕಾರಿಗಳನ್ನೊಳಗೊಂಡ ತಂಡ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಶನಿವಾರ ಸಂಜೆ ಗ್ರಾಮಕ್ಕೆ ತೆರಳಿ ವಿಚಾರಣೆ ನಡೆಸಿತು. ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತನಿಖಾ ದಳದವರು ವಿಚಾರಣೆ ನಡೆಸಿರುವುದು ನಿಜ. ಆದರೆ ಸ್ಥಳೀಯವಾಗಿ ಯಾವುದೇ ಪ್ರಕರಣ ದಾಖಲಿಸಿಲ್ಲ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆ ಕೈಗೊಂಡಿರಬಹುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.