ಇದಕ್ಕೆ ಪ್ರತಿಕ್ರಿಯಿಸಿದ ಬಸವನಗೌಡ, ‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು. ಈವರೆಗೆ ಸುಮಾರು ಒಂಬತ್ತು ಕೋಟಿಯಷ್ಟು ಉದ್ಯೋಗ ಸೃಷ್ಟಿಯಾಗಬೇಕಾಗಿತ್ತು. ಆದರೆ, ಈವರೆಗೆ ಹೇಳಿದ ಭರವಸೆ ಈಡೇರಿಲ್ಲ. ಒಂದೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರಿದರೆ ನಿಶ್ಚಿತವಾಗಿ ನಿರುದ್ಯೋಗ ದೂರ ಮಾಡುತ್ತದೆ’ ಎಂದರು. ಮರು ಪ್ರಶ್ನಿಸಿದ ವಿದ್ಯಾರ್ಥಿಗಳು, ‘ದೇಶದ ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಇದನ್ನು ಯಾವ ರೀತಿ ನಿಯಂತ್ರಿಸುತ್ತೀರಿ? ಮೇಲ್ವರ್ಗದ ಬಡವರಿಗೆ ಸಿಗದ ಮೀಸಲಾತಿಯನ್ನು ಹೇಗೆ ಕೊಡಿಸುತ್ತೀರಿ? 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ದೇಶಕ್ಕೆ ಏನು ಮಾಡಿದೆ’ ಎಂದರು.