ಅಂಕೋಲಾ: ವಿಧಾನಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ ನೀತಿ ಸಂಹಿತೆ ಮತ್ತು ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಯಿತು.
ಕನ್ನಡ ರಾಜ್ಯೋತ್ಸವ ಆಚರಣೆಯ ಸಿದ್ಧತೆಯ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಉದಯ ಕುಂಬಾರ, ವಿವಿಧ ಇಲಾಖೆಯವರು ತಮ್ಮ ಕಾರ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಗೆ ಭುವನೇಶ್ವರಿ ದೇವಿಯ ಪೂಜೆ ಮಾಡಬೇಕು. 9 ಗಂಟೆಗೆ ಸತ್ಯಾಗ್ರಹ ಸ್ಮಾರಕ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಸರಳವಾಗಿ ರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಹಿಂದಿನ ವರ್ಷದಂತೆ ಸಾಯಂಕಾಲ ಅಂಗಡಿ-ಮುಂಗಟ್ಟುಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ದೀಪಾಲಂಕಾರ ಮಾಡಲು ಅವಕಾಶ ನೀಡಲಾಗಿದೆ ಎಂದರು.
ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪಿ.ವೈ.ಸಾವಂತ, ಪುರಸಭೆ ಮುಖ್ಯಾಧಿಕಾರಿ ಬಿ, ಪ್ರಹ್ಲಾದ, ಸಿಪಿಐ ಕೃಷ್ಣಾನಂದ ನಾಯಕ, ಸಾಹಿತಿಗಳಾದ ವಿಷ್ಣು ನಾಯ್ಕ, ಪ್ರೊ. ಆರ್. ಜಿ. ಗುಂದಿ ಸೇರಿದಂತೆ ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದರು.