ಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ

ಶಿರಸಿ: ‘ಶ್ರಮಜೀವಿಗಳಾದ ಕಾರ್ಮಿಕರು ದುಡಿಮೆಯ ಜತೆಗೆ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿ ರೋಗನಿರೋಧಕ ಶಕ್ತಿ ವೃದ್ಧಿಸಿಕೊಳ್ಳಬೇಕು’ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು.
ಇಲ್ಲಿನ ಪಂಚಾಯತ್ರಾಜ್ ಎಂಜಿನಿಯರಿಂಗ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಪೂರೈಸಲಾದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.
‘ದುಶ್ಚಟದಿಂದ ದೂರ ಇರಬೇಕು. ಯೋಗ ರೂಢಿಸಿಕೊಂಡು, ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಸುಧಾರಣೆಯತ್ತ ಲಕ್ಷ್ಯ ವಹಿಸಬೇಕು’ ಎಂದರು.
‘ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದ ಕಾರ್ಮಿಕರಿಗೆ ಅರಿವು ಮೂಡಿಸಿ ನೋಂದಣಿ ಮಾಡಿಕೊಳ್ಳುವಂತೆ ಮಾಡಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸಬೇಕು’ ಎಂದರು.
ಕಾರ್ಮಿಕ ಇಲಾಖೆ ಅಧಿಕಾರಿ ನವೀನ ಕುಮಾರ್, ‘ಕೋವಿಡ್ ಕಾರಣ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಕಲ್ಯಾಣ ಮಂಡಳಿ ಮುಂದಾಗಿದೆ. ಆಧಾರ್ ಜೋಡಣೆಯಾದ ಖಾತೆಗೆ ಪರಿಹಾರ ಜಮಾ ಆಗಲಿದೆ’ ಎಂದರು.
ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಕಾರ್ಮಿಕರ ಸಂಘದ ಅಧ್ಯಕ್ಷ ಕಮಲಾಕರ ಆಚಾರಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.