ಅಂಕೋಲಾ: ತಾಲ್ಲೂಕಿನ ಮಾಸ್ತಿಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶುಕ್ರವಾರ ರಾತ್ರಿ, ವಾಹನ ಡಿಕ್ಕಿಯಾಗಿ ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ.
ಚಿರತೆಯು ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾಗಿರಬಹುದು. ವಾಹನ ಅಪ್ಪಳಿಸಿದ ತೀವ್ರತೆಗೆ ಗಂಭೀರ ಸ್ವರೂಪದ ಗಾಯಗಳಾಗಿ ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಚಿರತೆಯ ತಲೆಯ ಭಾಗದಿಂದ ರಕ್ತಸ್ರಾವ ಆಗಿದ್ದು, ಬೆನ್ನುಮೂಳೆ ಮುರಿದಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಹಿಲ್ಲೂರು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಡಾ.ಚಂದನ್ ಅವರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
‘ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಸಂತ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ದೂರು ದಾಖಲಿಸಿಕೊಂಡು, ಮುಂದಿನ ತನಿಖೆ ನಡೆಸಲಾಗುವುದು’ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ರಾಘವೇಂದ್ರ ತಿಳಿಸಿದ್ದಾರೆ.