ಶಿರಸಿ: ಕಾಂಗ್ರೆಸ್ ಪಕ್ಷ ರೂಪಿಸಿದ ಆರೋಗ್ಯ ಹಸ್ತ, ಸಹಿ ಸಂಗ್ರಹ ಅಭಿಯಾನಗಳನ್ನು ಜನರಿಗೆ ಪರಿಚಯಿಸಿ ಪರಿಣಾಮಕಾರಿಯಾಗಿ ಯಶಸ್ವಿಗೊಳಿಸುವಂತೆ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಇಲ್ಲಿನ ತೋಟಿಗರ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ವಿಸ್ತೃತ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಪಕ್ಷದಿಂದ ಸೂಚಿಸಲಾದ ಚಟುವಟಿಕೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿ ಆರ್.ಎಂ.ಕುಬೇರಪ್ಪ ಗೆಲುವಿಗೆ ಶ್ರಮಿಸಬೇಕು’ ಎಂದರು.
‘ಈ ಹಿಂದೆ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು. ಈ ಬಾರಿ ಇತಿಹಾಸ ಮರುಕಳಿಸಬೇಕು’ ಎಂದರು.
ವಿಧಾನ ಪಷರಿತ್ ಸದಸ್ಯ ಎಸ್.ಎಲ್.ಘೊಟ್ನೇಕರ್ ಮಾತನಾಡಿ, ‘ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಪದವೀಧರರನ್ನು ಸಂಪರ್ಕ ಮಾಡಿ ಮನವೊಲಿಸುವ ಮೂಲಕ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು’ ಎಂದರು.
ಮುಖಂಡರಾದ ಶಾರದಾ ಶೆಟ್ಟಿ ಮಾತನಾಡಿ, ‘ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಸರ್ಕಾರಕ್ಕೆ ಬುದ್ಧಿ ಕಲಿಸಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಕೆಲಸ ಮಾಡಿ’ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ, ‘ಕೆಪಿಸಿಸಿ ಹಾಗೂ ಎಐಸಿಸಿ ಸೂಚಿಸಿದ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಿ’ ಎಂದರು.
ಮುಖಂಡರಾದ ಸತೀಶ ಸೈಲ್, ಶಾರದಾ ಶೆಟ್ಟಿ, ಮಂಕಾಳು ವೈದ್ಯ, ಕೆ.ಎಚ್.ಗೌಡ ಇನ್ನಿತರರು ಇದ್ದರು.