ಬೆಂಗಳೂರು: ಮೂರು ತಿಂಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಇದೇ 28ರಂದು ಎಲ್ಲ ತಾಲ್ಲೂಕು ಕಚೇರಿಗಳ ಎದುರು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಸಂಘದ ಅಧ್ಯಕ್ಷ ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತಾನಾಡಿ ‘ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಚುನಾವಣೆಯ ನೆಪ ಹೇಳಿ ಅಧಿಕಾರಿಗಳು ವೇತನ ನೀಡದೆ ಸತಾಯಿಸುತ್ತಿದ್ದಾರೆ’ ಎಂದರು.
‘ಆನ್ಲೈನ್ ಮೂಲಕ ವೇತನ ಪಾವತಿಸುವ ಹಾಗೂ ಅದರಲ್ಲಿನ ಗೊಂದಲಗಳ ನಿವಾರಣೆ ಮತ್ತು ಅನುಸರಿಸಬೇಕಾದ ನಿಯಮಗಳ ಕುರಿತು ಇಲಾಖೆಯ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸಿ ಮಾಹಿತಿ ನೀಡಲಾಗಿದೆ. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಮುಂದುವರಿಸಿದ್ದಾರೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
‘ಪಂಚಾಯಿತಿಗಳಲ್ಲಿರುವ ಕರ ವಸೂಲಿಗಾರರಿಗೆ ಬಡ್ತಿ ನೀಡಲು ಪಿಯುಸಿ ವಿದ್ಯಾಭ್ಯಾಸವನ್ನು ಕಡ್ಡಾಯ ಮಾಡಲಾಗಿದೆ. ಆದರೆ, ಎಸ್ಎಸ್ಎಲ್ಸಿ ಉತ್ತೀರ್ಣರಾದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಬಡ್ತಿ ನೀಡುವಾಗ ಸೇವೆ ಸಲ್ಲಿಸಿದ ಅವಧಿಯನ್ನೂ ಪರಿಗಣಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.