ಶಿರಸಿ: ಅಧಿಕಾರಕ್ಕೆ ಬಂದ ಎಂಟು ವರ್ಷಗಳಲ್ಲಿ ದೇಶದ ಸಾಲವನ್ನು ಮೂರುಪಟ್ಟು ಹೆಚ್ಚಳ ಮಾಡಿದ್ದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೋದಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಸಾಲ ₹53 ಲಕ್ಷ ಕೋಟಿಯಷ್ಟಿತ್ತು. ಈಗ ಅದು ₹155 ಲಕ್ಷ ಕೋಟಿಗೆ ತಲುಪಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪ್ರತಿ ವರ್ಷ ₹70 ಸಾವಿರ ಕೋಟಿ ಸಾಲ ಮಾಡುತ್ತಿದೆ. ಇದು ಜನರ ಮೇಲೆ ಆರ್ಥಿಕ ಹೊರೆಯಾಗಲು ಕಾರಣವಾಗಿದೆ’ ಎಂದರು.
‘ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಭಾಗಿಯಾದ ಮಾತ್ರಕ್ಕೆ ಬಂಡವಾಳ ಹರಿದು ಬರುವುದಿಲ್ಲ. ಶಾಂತಿ, ಸುವ್ಯವಸ್ಥೆ ನೆಲೆಸಿದ್ದರೆ ಮಾತ್ರ ಹೂಡಿಕೆದಾರರನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕು. ಕೋಮು ದ್ವೇಷ ಹರಡುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು’ ಎಂದರು.
‘ಜೆಡಿಎಸ್ ಜತೆಗಿನ ಮೈತ್ರಿ ಮುಗಿದ ಅಧ್ಯಾಯವಾಗಿದೆ. ಇನ್ನು ಮುಂದೆ ಜೆಡಿಎಸ್ ಜತೆ ಯಾವುದೇ ಸ್ನೇಹ ಇಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.