ಕಲಾಪದ ಶೂನ್ಯ ವೇಳೆಯಲ್ಲಿ ಮಾತನಾಡಿದ ಸದಸ್ಯ ಪಿ.ಎಂ.ಮುನಿರಾಜು ಗೌಡ, ‘ಪ್ರಜಾವಾಣಿ’ಯ ಮಾರ್ಚ್ 13ರ ಸಂಚಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಯನ್ನು ಪ್ರಸ್ತಾಪಿಸಿದರು. ‘ಬಸ್ಸಿಗಾಗಿ 8 ಕಿ.ಮೀ ನಡೆವ ವಿದ್ಯಾರ್ಥಿಗಳು!’ ಶೀರ್ಷಿಕೆಯಲ್ಲಿ ಪತ್ರಿಕೆಯ ಮುಖಪುಟದಲ್ಲಿ ಅಂದು ವರದಿ ಪ್ರಕಟವಾಗಿತ್ತು.
‘ಬಸ್ ಸೌಕರ್ಯವಿಲ್ಲದ ಕಾರಣ ಸುಮಾರು 40 ಮಕ್ಕಳು ಶಾಲೆಗೆ ಹೋಗಲು ದಟ್ಟ ಕಾಡಿನ ನಡುವೆ ನಡೆದುಕೊಂಡು ಹೋಗುವುದು ಸಾಹಸವೇ ಸರಿ. ಇದರಿಂದ ಮಕ್ಕಳ ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಹೆಣ್ಣು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಕಾಡು ದಾರಿಯಲ್ಲಿ ಸಂಜೆ ಮನೆಗೆ ಬರುವಾಗ ಏನಾದರೂ ಅನಾಹುತ ಆಗುವ ಮೊದಲೇ ಸರ್ಕಾರ ಎಚ್ಚೆತ್ತುಕೊಂಡು ಬಸ್ ಸೌಲಭ್ಯ ಒದಗಿಸಬೇಕು’ ಎಂದು ಮುನಿರಾಜು ಗೌಡ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಸುರೇಶಕುಮಾರ್, ‘ಕಳೆದ ವರ್ಷ ಆ ಹಳ್ಳಿಗೆ ನಾನೂ ಭೇಟಿ ನೀಡಿದ್ದೆ. ಅಲ್ಲಿನ ಪರಿಸ್ಥಿತಿಯನ್ನು ಅರಿತಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚಿಸಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.