ಕಾರವಾರ:ನಗರದ ಕಾಳಿ ರಿವರ್ ಗಾರ್ಡನ್ನಲ್ಲಿ ಡಿ.21ರಿಂದ 23ರವರೆಗೆ ‘ಅಂತರರಾಷ್ಟ್ರೀಯ ದ್ರಾಕ್ಷಾರಸ ಉತ್ಸವ’ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದ್ರಾಕ್ಷಾರಸ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಟಿ.ಸೋಮು ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಇದರಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ 10ರಿಂದ 12 ವೈನರಿಗಳು ಪಾಲ್ಗೊಳ್ಳಲಿವೆ. 150ಕ್ಕೂ ಅಧಿಕ ಬ್ರ್ಯಾಂಡ್ಗಳನ್ನು ಪ್ರದರ್ಶಿಸಲಾಗುವುದು. ಯುರೋಪ್ ಖಂಡದ ವಿವಿಧ ದೇಶಗಳು, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಚಿಲಿ ಮತ್ತು ಅಮೆರಿಕದ ವೈನ್ ಪ್ರದರ್ಶನ ಮತ್ತು ಮಾರಾಟವೂ ಇದೆ’ ಎಂದರು.
ಆರೋಗ್ಯದ ದೃಷ್ಟಿಯಿಂದ ವೈನ್ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವೈನ್ ದ್ರಾಕ್ಷಿ ಬೆಳೆಯುವುದು ಹಾಗೂ ವೈನ್ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು. ವೈನ್ ತಯಾರಕರು ಮತ್ತು ಸಾರ್ವಜನಿಕರ ನಡುವೆ ಸಂವಾದವನ್ನೂ ಏರ್ಪಡಿಸಲಾಗುವುದು.ದ್ರಾಕ್ಷಾರಸದಜತೆ ಸೇವಿಸುವ ಆಹಾರಗಳ ಮಳಿಗೆಗಳು, ಸಂಗೀತ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಎಲ್ಲ ವೈನ್ ಬ್ರ್ಯಾಂಡ್ಗಳ ದರದ ಮೇಲೆ ಶೇ 10ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರಿಗೆ ₹ 20 ಪ್ರವೇಶ ದರ ನಿಗದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಉತ್ಸವಆಯೋಜಿಸಲಾಗಿದೆ.ಉತ್ಸವಕ್ಕೆ ಡಿ.21ರಂದು ಸಂಜೆ 6ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಚಾಲನೆ ನೀಡಲಿದ್ದಾರೆ. ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಭಾಗವಹಿಸುವರು ಎಂದು ತಿಳಿಸಿದರು.
ವೈನ್ ಉತ್ಪಾದನೆಯಲ್ಲಿ ಹೆಚ್ಚಳ:ಇಡೀ ದೇಶದಲ್ಲಿ ‘ದ್ರಾಕ್ಷಿ ಸಂಸ್ಕರಣೆ ಮತ್ತು ದ್ರಾಕ್ಷಾರಸ ನೀತಿ’ ಹಾಗೂ ದ್ರಾಕ್ಷಾರಸ ಮಂಡಳಿ ಇರುವುದು ಕರ್ನಾಟಕದಲ್ಲಿ ಮಾತ್ರ. ಇದರ ಫಲವಾಗಿ ವೈನ್ ಉತ್ಪಾದನೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಟಿ.ಸೋಮು ಹೇಳಿದರು.
ಕಳೆದ ವರ್ಷ ರಾಜ್ಯದಲ್ಲಿ 72.5 ಲಕ್ಷ ಲೀಟರ್ ವೈನ್ ಉತ್ಪಾದನೆಯಾಗಿತ್ತು. ಈ ವರ್ಷ 80 ಲಕ್ಷ ಲೀಟರ್ ಆಗಿದೆ. ಸದ್ಯ ರಾಜ್ಯದಲ್ಲಿ ಉತ್ಪಾದಿಸುತ್ತಿರುವ ವೈನ್ಗೆ ಸ್ಥಳೀಯವಾಗಿ ಬೆಳೆಯುತ್ತಿರುವ ದ್ರಾಕ್ಷಿ ಸಾಕಾಗುತ್ತಿದೆ ಎಂದು ತಿಳಿಸಿದರು.
ಮಂಡಳಿಯ ಪ್ರಮುಖರಾದ ಸತೀಶ್ ಕುಮಾರ್ ಮತ್ತು ಸುರೇಶ್ಚಂದ್ರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.