ಕಾರವಾರದ ಗೊಟೆಗಾಳಿ ಗ್ರಾಮದ ಮಹಿಳೆ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಕಾರವಾರಕ್ಕೆ ವಾಪಸಾಗಿದ್ದರು. ನಂತರ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಂಗಳೂರಿಗೆ ಹೋಗಿ ಬಂದ ವಿಚಾರ ಮತ್ತು ಅನಾರೋಗ್ಯದ ಸಂಗತಿಯನ್ನು ಅವರ ಕುಟುಂಬದವರು ಆಸ್ಪತ್ರೆಯ ಸಿಬ್ಬಂದಿಗೆ ತಿಳಿಸಿರಲಿಲ್ಲ ಎನ್ನಲಾಗಿದೆ. ತೀವ್ರ ನಿಗಾ ಘಟಕಕ್ಕೆ ದಾಖಲಿಸಿದಾಗ ಜ್ವರ ಕಂಡುಬಂದ ಕಾರಣ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿತ್ತು. ಆಗ ಕೋವಿಡ್ 19 ದೃಢಪಟ್ಟಿತ್ತು. ಬಳಿಕ ಅವರನ್ನು 'ಕ್ರಿಮ್ಸ್'ನ ಕೋವಿಡ್ ವಾರ್ಡ್ ಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಬಿಗಡಾಯಿಸಿದ ಕಾರಣ ಗುರುವಾರದಿಂದ ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.