ಕಾರವಾರ: ‘ಸ್ವೀಕಾರ ಕೇಂದ್ರ ಹಾಗೂ ಬಾಲಕಿಯರ ಬಾಲಮಂದಿರದಲ್ಲಿ ಆಶ್ರಯ ಅರಸಿ ಬರುವವರಿಗೆ ಯಾವುದೇ ಅಡೆತಡೆ ಆಗದಂತೆ ನೋಡಿಕೊಳ್ಳಬೇಕು. ಸಿಬ್ಬಂದಿಯು ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಲಭ್ಯವಿದ್ದು, ಕೇಂದ್ರಕ್ಕೆ ದಾಖಲಾದವರಿಗೆ ಉತ್ತಮ ಸೌಲಭ್ಯ ಒದಗಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ, ನಗರದ ಜಿಲ್ಲಾ ಬಾಲಕಿಯರ ಬಾಲ ಮಂದಿರ ಹಾಗೂ ಸ್ವೀಕಾರ ಕೇಂದ್ರಕ್ಕೆ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
‘ಸಮಾಜದಲ್ಲಿ ವಿವಿಧ ತೊಂದರೆಗಳಿಗೆ ಒಳಗಾಗಿ ಬಾಲಮಂದಿರದಲ್ಲಿ ಆರರಿಂದ 18 ವರ್ಷದೊಳಗಿನ ಒಟ್ಟು 24 ಬಾಲಕಿಯರು ಆಶ್ರಯ ಪಡೆದಿದ್ದಾರೆ. ಅವರಿಗೆ ಊಟ, ವಸತಿ, ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದಕ್ಕಾಗಿ ಜಿಲ್ಲಾ ಕೇಂದ್ರದಲ್ಲಿ ₹ 3.61 ಕೋಟಿ ವೆಚ್ಚದಲ್ಲಿ ಬಾಲಕಿಯರ ಬಾಲಮಂದಿರ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಯನ್ನೂನೇಮಿಸಲಾಗಿದೆ’ ಎಂದರು.
ಇದೇ ಸಂದರ್ಭದಲ್ಲಿ ಬಾಲಕಿಯರ ಬಾಲಮಂದಿರ ಹಾಗೂ ಸ್ವೀಕಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಬಾಲಕಿಯರಿಗೆ ನೀಡಲಾಗುವ ಉಪಾಹಾರ, ಊಟ, ಕುಡಿಯುವ ನೀರಿನ ಗುಣಮಟ್ಟ, ಶೌಚಾಲಯ, ಬಟ್ಟೆ ತೊಳೆಯುವ ಹಾಗೂ ಒಣಗಿಸುವ ಸ್ಥಳಗಳ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ., ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ಜಯಶ್ರೀ ಡಿ. ನಾಯ್ಕ ಹಾಗೂ ಸ್ವೀಕಾರ ಕೇಂದ್ರದ ಪ್ರಭಾರ ಅಧೀಕ್ಷಕ ಮಿಲ್ಲನ್ ಹಾಜರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಅಧೀಕ್ಷಕ ಜಿ.ಆರ್.ಭಟ್, ತಾಲ್ಲೂಕು ಐ.ಇ.ಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ ಇದ್ದರು.