ಶಿರಸಿ: ಸರ್ಕಾರದ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಯನ್ನು ಮಾರ್ಗಸೂಚಿಯಂತೆ ಮಾಡದೆ ಇರುವುದನ್ನು ಖಂಡಿಸಿ ಶಿರಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್ ಕಾರ್ಯಕರ್ತರು ಉಪವಿಭಾಗಾಧಿಕಾರಿ ದೇವರಾಜ್ ಆರ್ ಹಾಗೂ ತಾಲ್ಲೂಕು ಪಂಚಾಯ್ತಿ ಇಒ ದೇವರಾಜ ಹಿತ್ಲಕೊಪ್ಪ ಅವರಿಗೆ ಮನವಿ ಸಲ್ಲಿಸುವ ಜೊತೆ ಅರ್ಹರಿಗೆ ಮನೆ ಹಂಚಿಕೆ ಮಾಡುವಂತೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಭೀಮಣ್ಣ ನಾಯ್ಕ ಮಾತನಾಡಿ, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಬಸವ ವಸತಿ ಯೋಜನೆಯಡಿ ಮನೆಗಳನ್ನು ವಿತರಿಸುವ ಕಾರ್ಯ ಜರುಗುತ್ತಿದೆ. ಯೋಜನೆಯಡಿ ಫಲಾನುಭವಿಗಳ ಆಯ್ಕೆ ಕುರಿತು ಕ್ರಮ ಜರುಗಿಸುತ್ತಿರುವುದ ಶ್ಲಾಘನೀಯ. ಈ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಗ್ರಾಮ ಪಂಚಾಯ್ತಿ ಮಟ್ಟದ ಗ್ರಾಮ ಸಭೆಗಳಲ್ಲಿ ಆಯ್ಕೆ ನಡೆಯಬೇಕು. ಆದರೆ ಶಿರಸಿ ತಾಲ್ಲೂಕಿನ ಅನೇಕ ಗ್ರಾಮ ಪಂಚಾಯ್ತಿ, ನಗರಸಭೆ ವಾರ್ಡ್ ವ್ಯಾಪ್ತಿಯಲ್ಲಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಾರ್ಯ ಮಾಡಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅರ್ಹ ಫಲಾನುಗಳನ್ನು ಗುರುತಿಸುವ ಕಾರ್ಯದಲ್ಲಿ ಗ್ರಾಮ ಪಂಚಾಯ್ತಿ ಆಡಳಿತ ವ್ಯವಸ್ಥೆಯಲ್ಲಿ ಇರದ ಅನ್ಯ ವ್ಯಕ್ತಿಗಳು ಹಸ್ತಕ್ಷೇಪ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಇದು ಸರ್ಕಾರದ ಮಾರ್ಗಸೂಚಿಗೆ ವಿರುದ್ಧವಾಗಿದ್ದು, ಇಂಥ ಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುವು ಮಾಡಿಕೊಡಬಾರದು.
ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆ ಸರ್ಕಾರದ ಸೂಚಿತ ಕ್ರಮದಂತೆ ಮಾಡಿ ಗ್ರಾಮಸಭೆಯ ಅನುಮೋದನೆ ಪಡೆದು ಕಳುಹಿಸುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಬೇಕು. ಕೂಡಲೇ ಈ ಕುರಿತು ಕ್ರಮ ಜರುಗಿಸದೇ ಇದ್ದಲ್ಲಿ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದರು.
ಈ ವೇಳೆ ಬ್ಲಾಕ್ ಅಧ್ಯಕ್ಷ ಜಗದೀಶ ಗೌಡ, ಪಕ್ಷದ ಪದಾಧಿಕಾರಿಗಳಾದ ಎಸ್.ಕೆ.ಭಾಗವತ, ಶ್ರೀಪಾದ ನಾಯ್ಕ, ರವೀಂದ್ರ ನಾಯ್ಕ, ಶ್ರೀಪಾದ ಕಡವೆ, ಜ್ಯೋತಿ ಗೌಡ, ಸಂತೋಷ ಶೆಟ್ಟಿ, ಸುಮಾ ನಾಯ್ಕ, ಮೋಹಿನಿ ಬೈಲೂರು ಇತರರಿದ್ದರು.