ಕಾರವಾರ: ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ.
2017ರ ಡಿ.7ರಂದು ಮೀನುಗಾರ ಸಮುದಾಯದ ಯುವಕ ಪರೇಶ ಮೃತದೇಹ ಪತ್ತೆಯಾಗಿತ್ತು. ಬಳಿಕ ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರಿ ಘರ್ಷಣೆಗಳು ಉಂಟಾಗಿದ್ದವು. ಪ್ರಕರಣದ ತನಿಖೆಯನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಿ.ಬಿ.ಐಗೆ ವಹಿಸಿತ್ತು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿತ್ತು.