ಕಾರವಾರ: ‘ಯುವ ಜನತೆ ನಾಗರಿಕ ಸೇವೆಗಳಿಗೆ ಆಯ್ಕೆಯಾಗಲು ಆಸಕ್ತಿ ತೋರುವ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಏಕಾಗ್ರತೆಯೊಂದಿಗೆ ಸಿದ್ಧತೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಗಂಗುಬಾಯಿ ಮಾನಕರ್ ಸಲಹೆ ನೀಡಿದರು.
ಇಲ್ಲಿನ ಜಿಲ್ಲಾ ರಂಗ ಮಂದಿರದಲ್ಲಿ ಈಚೆಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಸತತ ಪ್ರಯತ್ನ, ಕಠಿಣ ಪರಿಶ್ರಮದಿಂದ ಮಾತ್ರ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ. ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳನ್ನು ಹಾಗೂ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಅವುಗಳ ಸದುಪಯೋಗ ಪಡೆದುಕೊಂಡು ತಮಗೆ ಸಿಕ್ಕ ಸಮಯವನ್ನು ಬಳಸಿಕೊಂಡು, ಯಶಸ್ವಿಯಾಗಬೇಕು’ ಎಂದರು.
ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ, ‘ಬಡತನ, ಕೀಳರಿಮೆ, ಅವಮಾನಗಳನ್ನು ಮೆಟ್ಟಿ ನಿಲ್ಲುವ ಮೂಲಕ ಶ್ರದ್ಧೆ ಮತ್ತು ಸತತ ಪರಿಶ್ರಮ, ಏಕಾಗ್ರತೆಯಿಂದ ಸಾಗಿದರೆ ಯಶಸ್ಸು ಸಿಗಲಿದೆ’ ಎಂದರು.
ಕಾರ್ಯಾಗಾರದಲ್ಲಿ ಶಿರಸಿಯ ಉಪ ವಿಭಾಗಾಧಿಕಾರಿ ದೇವರಾಜ ಆರ್., ದೇವಿ ಚರಣ್ ಅವರು ಕೆ.ಎ.ಎಸ್, ಯುಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಬಗ್ಗೆ ಹಾಗೂ ಕಮಾಂಡರ್ ರಾಹುಲ ಕುಮಾರ ಪವಾರ, ಲೆಫ್ಟಿನಂಟ್ ಕರ್ನಲ್ ದಯಾನಂದ ಮೆಸ್ತಾ ಅವರು ಭಾರತೀಯ ನೌಕಪಡೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ. ಸತೀಶ್, ಶಿಕ್ಷಕ ಗಣೇಶ್ ಬಿಷ್ಟಣ್ಣನವರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.