ಕಾರವಾರ: ‘ಆಧುನಿಕ ಜೀವನ ಶೈಲಿಯ ಪರಿಣಾಮ ಮನುಷ್ಯ ಪ್ರತಿ ಕ್ಷಣ ಒತ್ತಡದಲ್ಲಿ ಕಳಯುವ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳಿಂದ ಹೆಚ್ಚು ಎಚ್ಚರಿಕೆ ವಹಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಡೆಂಘಿ ರೋಗ ನಿಯಂತ್ರಣದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಆರೋಗ್ಯ ಸುರಕ್ಷತೆಯ ಕುರಿತು ಜನರು ಹೆಚ್ಚು ಕಾಳಜಿ ವಹಿಸಬೇಕು. ಡೆಂಘಿ, ಚಿಕುನ್ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳನ್ನು ದೂರವಿಡಲು ಆರೋಗ್ಯ ಇಲಾಖೆ ಸೂಚಿಸುವ ಕ್ರಮಗಳನ್ನು ಪಾಲಿಸಬೇಕು’ ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಕ್ಯಾಪ್ಟನ್ ರಮೇಶ ರಾವ್, ಡಾ.ಶಂಕರ ರಾವ್, ಇತರರು ಇದ್ದರು.
ಜಿಲ್ಲಾಧಿಕಾರಿ ಕಚೇರಿ ಎದುರಿನಿಂದ ಹೊರಟ ಜಾಥಾ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಕೊನೆಗೊಂಡಿತು.