ಕುಮಟಾ: ‘ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಅಭ್ಯಾಸಕ್ಕಷ್ಟೇ ಸೀಮಿತವಾಗಿರದೆ ವಿಜ್ಞಾನ, ತಂತ್ರಜ್ಞಾನದ ಬೇರೆ ಬೇರೆ ಕ್ಷೇತ್ರಗಳ ಬಗ್ಗೆಯೂ ಆಸಕ್ತಿ ವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸತೀಶ ನಾಯ್ಕ ಹೇಳಿದರು.
ತಾಲ್ಲೂಕಿನ ಗೋರೆ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಗುರುವಾರ ರಸಾಯನ ಶಾಸ್ತ್ರ ಉಪನ್ಯಾಸಕರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಾಗಾರ ಉದ್ಘಾಟಿಸಿದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ. ಜಿ.ಜಿ ಹೆಗಡೆ, ವಿಜ್ಞಾನ ಓದುವ ಪ್ರತಿಭಾವಂತ ವಿದ್ಯಾರ್ಥಿಗಳು ಅತ್ಯುತ್ತಮ ಶಿಕ್ಷಕ, ಹೆಸರಾಂತ ವಿಜ್ಞಾನಿ ಅಥವಾ ದೇಶಕ್ಕೆ ಅಗತ್ಯವಿರುವ ಸಂಶೋಧಕರಾಗಿ ಹೆಸರು ಮಾಡಲು ಸಾಧ್ಯವಿದೆ. ಅಂತಹ ಸಾಧ್ಯತೆಗಳ ಬಗ್ಗೆ ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುತ್ತಿದೆ ಎಂದರು.
ಪ್ರಾಚಾರ್ಯ ಡಿ.ಎನ್. ಭಟ್ಟ, ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಜಿ.ಎನ್.ಹೆಗಡೆ, ಕಾರ್ಯದರ್ಶಿ ಆರ್.ಟಿ. ನಾಯ್ಕ, ಸದಸ್ಯೆ ಪೂಜಾ ಭಟ್ಟ ಇದ್ದರು.
ರಸಾಯನಶಾಸ್ತ್ರದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಸಹಯೋಗದೊಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.