ಭಟ್ಕಳ: ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಮುಕ್ತ ಕರ್ನಾಟಕವಾಗಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ, ಗ್ಯಾರಂಟಿ ಯೋಜನೆಯ ಕರಪತ್ರ ಪ್ರದರ್ಶಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇವಲ ಮೂರು ಸ್ಥಾನಗಳಲ್ಲಿ ಟಿಕೆಟ್ ಪಡೆದುಕೊಂಡ ಜೆಡಿಎಸ್ ಮೂರೂ ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಕಳೆದ ಹತ್ತು ವರ್ಷಗಳಲ್ಲಿ ಮೋದಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಿಂದ ಹೊಸ ಭಾಷ್ಯ ಬರೆದಿದ್ದಾರೆ. ಜನರು ಬಿಜೆಪಿಯನ್ನು ತಿರಸ್ಕರಿಸಿ ಈ ಬಾರಿ ನಮಗೆ ಮತ ಹಾಕಲಿದ್ದಾರೆ ಎಂದರು.
ರಾಜ್ಯಕ್ಕೆ ಜಿ.ಎಸ್.ಟಿ. ನೀಡುವಲ್ಲಿ, ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿದ್ದು, ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಲ್ಲಿಯೂ ತಾರತಮ್ಯ ಮಾಡುತ್ತಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಅತಿಕ್ರಮಣ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಹಾಗೂ ಚುನಾವಣಾ ಜಿಲ್ಲಾ ಉಸ್ತುವಾರಿ ರವೀಂದ್ರನಾಥ ನಾಯ್ಕ ಶಿರಸಿ, ರಾಮಾ ಮೊಗೇರ, ಆಲ್ಬರ್ಟ ಡಿಕೋಸ್ತ, ಸುರೇಶ ಆಯ್ಕ ಇದ್ದರು.