ಕಾರವಾರ: ಕಾರ್ಮಿಕ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಿ ಹಣ ಮಂಜೂರಾದ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಸಹಾಯಧನವನ್ನು ಕೂಡಲೇ ಜಮೆ ಮಾಡಬೇಕು. ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ವಿವರಗಳನ್ನು ಕಚೇರಿಗೆ ಕಳುಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚಿಸಿದೆ.
ಇಲಾಖೆಯಿಂದ ಸಹಾಯಧನ ಮಂಜೂರಾದರೂ ಮಧ್ಯವರ್ತಿಗಳ ಹಾವಳಿಯಿಂದಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿಲ್ಲ. ಕೆಲವು ಫಲಾನುಭವಿಗಳು ಕಳೆದ ವರ್ಷ ಏಪ್ರಿಲ್ನಿಂದ ಸಹಾಯಧನಕ್ಕಾಗಿ ಕಾಯುತ್ತಿದ್ದಾರೆ. ಹಣ ಪಡೆಯಲು ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ‘ಪ್ರಜಾವಾಣಿ’ಯ ಫೆ.2ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.
ಈ ವರದಿಯನ್ನು ಗಮನಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸಂತೋಷಕುಮಾರ ಶೆಟ್ಟಿ ಕಾರ್ಮಿಕ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಇಲಾಖೆಯಿಂದ ಸಹಾಯಧನ ಮಂಜೂರಾಗಿರುವ ಕಾರ್ಮಿಕರ ಖಾತೆಗೆ ಕೂಡಲೇ ಹಣ ಜಮೆ ಮಾಡಲು ಮತ್ತು ಮಧ್ಯವರ್ತಿಗಳ ಹಾವಳಿ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ತಿಳಿಸಿದ್ದಾರೆ.