ಕಾರವಾರ: ಅಂಕೋಲಾ ತಾಲ್ಲೂಕಿನ ಬೇಲೆಕೇರಿ ಗ್ರಾಮದಲ್ಲಿರುವ ಉಡುಪಿಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ರಾಜೇಶ ಹಮ್ಮಣ್ಣ ನಾಯಕ ಅವರ ಮೂಲ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಸೋಮವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಅಧಿಕಾರಿಯ ಪಾಲಕರು ವಾಸವಿರುವ ಈ ಮನೆಗೆ ತೆರಳಿದ ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲಿಸಿದರು.
'ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿರುವ ರಾಜೇಶ ಅವರ ಕಚೇರಿ, ಮನೆ ಮೇಲೆಯೂ ದಾಳಿ ನಡೆದಿದೆ. ಅವರ ಮೂಲ ನಿವಾಸದಲ್ಲಿ ಕೆಲವು ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದ್ದು ಪರಿಶೀಲಿಸಲಾಗುತ್ತಿದೆ' ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.