ಕಾರವಾರ: ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಸರ್ಕಾರ ಚಿಂತಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಗರಕ್ಕೆ ಶುಕ್ರವಾರ ಭೇಟಿ ನೀಡಿ, ನೂತನ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಸ್ಥಳಗಳನ್ನು ಪರಿಶೀಲನೆ ನಡೆಸಿದರು.
ನಗರದ ಬಾಂಡಿಶಿಟ್ಟಾದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಜಿಲ್ಲಾ ಆಸ್ಪತ್ರೆಯ ಸುತ್ತಮುತ್ತ ಸೇರಿದಂತೆ ಮೂರು ನಾಲ್ಕು ಕಡೆಗಳಿಗೆ ಭೇಟಿ ನೀಡಿದರು. ಲಭ್ಯ ಸ್ಥಳ, ಅನುಕೂಲತೆ ಮತ್ತು ತೊಡಕುಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯು ಜಿಲ್ಲಾಧಿಕಾರಿ ಕಚೇರಿಯಲ್ಲಿದೆ. ಉಳಿದಂತೆ, ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಅಧಿಕಾರಿಗಳ ಕಚೇರಿಗಳು ನಗರದ ವಿವಿಧೆಡೆ ಬಾಡಿಗೆ ಕಟ್ಟಡಗಳಲ್ಲಿವೆ. ಇದರಿಂದ ಸಾರ್ವಜನಿಕರು, ವಿವಿಧ ಫಲಾನುಭವಿಗಳು ಸಾಕಷ್ಟು ಸಂಚರಿಸಬೇಕಾದ ಅನಿವಾರ್ಯತೆಯಿದೆ.
‘ಇಲಾಖೆಯ ಎಲ್ಲ ಕಚೇರಿಗಳನ್ನು ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಯೋಜಿಸಲಾಗಿದೆ. ಸಚಿವರ ಸೂಚನೆಯಂತೆ ವಿವಿಧ ಸ್ಥಳಗಳನ್ನು ಅವರಿಗೆ ತೋರಿಸಲಾಗಿದೆ. ಜಾಗ ಅಂತಿಮಗೊಂಡ ಬಳಿಕ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಕೆಯಾಗಲಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಇದಕ್ಕೂ ಮೊದಲು ನಗರದ ಸರ್ಕೀಟ್ ಹೌಸ್ನಲ್ಲಿ ಇಲಾಖಾ ಅಧಿಕಾರಿಗಳ ಸಭೆ ನಡೆಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅರಣ್ಯ ಭೂಮಿ ಹಕ್ಕು ಅರ್ಜಿಗಳ ಕುರಿತು ಚರ್ಚಿಸಿದರು.
ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ.ಎಂ, ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ, ತಹಶೀಲ್ದಾರ್ ನಿಶ್ಚಲ್ ನರೋನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ್ ಇದ್ದರು.