ಶಿರಸಿ: ‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಮೂಲಕ ಘರ್ ವಾಪಸಿ ಆರಂಭವಾಗಿದ್ದು, ಶೀಘ್ರದಲ್ಲೇ ಪಕ್ಷ ತೊರೆದವರ ಜತೆಗೆ ಕಾಂಗ್ರೆಸ್'ನ ಹಲವು ಮುಖಂಡರು ಬಿಜೆಪಿ ಸೇರಲಿದ್ದಾರೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ಆಗಮಿಸಿದ್ದ ಅವರು ಪತ್ರಕರ್ತರ ಜತೆ ಮಾತನಾಡಿ, ‘ಘರ್ ವಾಪಸಿ ಆರಂಭ ಮಾತ್ರ. ಇನ್ನು ಹಲವು ಕಾಂಗ್ರೆಸ್ಸಿಗರು ಬಿಜೆಪಿಗೆ ಬರಲಿದ್ದು, ಈ ಕುರಿತು ಚರ್ಚೆಯಲ್ಲಿದ್ದಾರೆ. ಪ್ರಧಾನಿ ಮೋದಿ ನೇತೃತ್ವ ಮೆಚ್ಚಿ ಈ ವಾಪಸಿ ಆಗುತ್ತಿದೆ’ ಎಂದರು.
‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳಿಸಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ರಾಜ್ಯದ 28 ಸಂಸದ ಸ್ಥಾನವನ್ನು ಗೆಲ್ಲಿಸಿ ಕೇಂದ್ರಕ್ಕೆ ಶಕ್ತಿಯಾಗಿ ನೀಡಲಾಗುವುದು’ ಎಂದರು.
‘ಸಚಿವ ಮಧು ಬಂಗಾರಪ್ಪ ಬಿಜೆಪಿಗರು ಹಾಗೂ ತಮ್ಮ ವಿರುದ್ಧ ಗೌರವವಿಲ್ಲದೇ ಮಾತನಾಡುವುದು ಸರಿಯಲ್ಲ. ತಮ್ಮ ಮಾತಿನ ಮೇಲೆ ಹಿಡಿತ ಸಾಧಿಸಬೇಕು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಸುಪುತ್ರರಾಗಿ ಘನತೆ ಬಿಟ್ಟು ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.