ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವ ವಿಚಾರ 2006 ರಿಂದಲೂ ಚರ್ಚೆಯಲ್ಲಿದೆ. ಸುಪ್ರಿಂ ಕೋರ್ಟ್ನಲ್ಲೂ ಈ ಸಂಬಂಧ ವಿಚಾರಣೆ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಐಎಎಸ್ ಅಧಿಕಾರಿ ಜೆ.ಸಿ.ಪ್ರಕಾಶ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಜೆ.ಸಿ.ಪ್ರಕಾಶ ಅವರು ಅಧ್ಯಯನ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದ್ದಾಗಿ ತಿಳಿದುಬಂದಿದೆ. ಈಗಾಗಲೇ ಮೊಗೇರ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ವರದಿ ಅಂಗೀಕರಿಸಿ ಕಾನೂನು ಮಾಡಿದ್ದ ರಾಜ್ಯ ಸರ್ಕಾರವು ಪ್ರಸ್ತುತ ಎರಡನೇ ಬಾರಿಗೆ ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡಿರುವುದು ಸರಿಯಲ್ಲ. ತರಾತುರಿಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ವರದಿಯಲ್ಲಿ ನೈಜ ಪರಿಶಿಷ್ಟರಿಗೆ ಅನ್ಯಾಯವಾದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದರು.