ಕಾರವಾರ: ‘ಜಿಲ್ಲೆಯಲ್ಲಿ ಶೀಘ್ರವೇ ಕೋವಿಡ್ ಲಸಿಕಾ ಮೇಳ ಮೇಳ ಆಯೋಜಿಸಲಾಗುತ್ತಿದೆ. ಇದಕ್ಕೆ ಆಯಾ ತಾಲ್ಲೂಕಿನವರು ತಮ್ಮ ಭಾಗದಲ್ಲಿ ಲಸಿಕೆ ಕೊಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಎಲ್ಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ, ಅವರ ಕಾರ್ಯಕ್ಷಮತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
‘ಲಸಿಕೆ ತೆಗೆದುಕೊಳ್ಳದಿರುವ ಗ್ರಾಮ ಮತ್ತು ಇತರ ಸಂಘ ಸಂಸ್ಥೆಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು. ಗ್ರಾಮದಲ್ಲಿ ಲಸಿಕಾ ಮೇಳ ಇರುವಾಗ ಅಲ್ಲಿಗೆ ವಾಹನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಇರುವ ಇತರ ಇಲಾಖೆಗಳ ವಾಹನಗಳನ್ನು ಬಳಸಿಕೊಳ್ಳಬೇಕು. ಯಾರಿಗೂ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದರು’ ಎಂದು ನಿರ್ದೇಶನ ನೀಡಿದರು.
‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರ ಐಸೋಲೇಶನ್ ಕೇಂದ್ರ ತೆರೆಯಬೇಕು. ಅದಕ್ಕೆ ಶೌಚಾಲಯ, ಬೆಳಕು, ನೀರಿನ ವ್ಯವಸ್ಥೆ ಇರುವಂಥ ಕಟ್ಟಡ ಗುರುತಿಸಬೇಕು’ ಎಂದು ಸೂಚಿಸಿದರು.
‘ಸ್ವ ಸಹಾಯ ಸಂಘದ ಸದಸ್ಯರು ಮತ್ತು ಉದ್ಯೋಗ ಖಾತ್ರಿ ಕಾರ್ಡ್ ಹೊಂದಿರುವವರನ್ನು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮೆ ಯೋಜನೆಯಡಿ ತಪ್ಪದೇ ನೋಂದಣಿ ಮಾಡಿಸಬೇಕು. ಹಳೆ ಸದಸ್ಯರನ್ನು ನವೀಕರಣ ಮಾಡಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕೆಲಸ ನಿಂತು ಹೋಗಿದ್ದರೆ ಕೆಲಸವನ್ನು ಕೂಡಲೇ ಆರಂಭಿಸಬೇಕು. ಕಳೆದ ವರ್ಷ ಕೈಗೊಳ್ಳಲಾದ ಕಾಮಗಾರಿಯಲ್ಲಿ ಕೆಲವನ್ನು ಕೂಡಲೇ ಶುರು ಮಾಡಬೇಕು. ಜೊತೆಗೆ, ಕೆಲಸದ ಅಂದಾಜು ಪಟ್ಟಿ ಸಲ್ಲಿಸಬೇಕು ಎಂದು ತಿಳಿಸಿದರು.
ಸ್ವಚ್ಛ ಭಾರತ ಅಭಿಯಾನ ಯೋಜನೆಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಬಗ್ಗೆ ಮಾಹಿತಿ ಪಡೆದ ಅವರು, ‘ಸ್ವಚ್ಛ ಸಂರ್ಕೀಣದಲ್ಲಿ ಕಾರ್ಯನಿರ್ವಹಿಸುವ ಚಾಲಕರಿಗೆ ಗ್ರಾಮ ಪಂಚಾಯಿತಿಯಿಂದ ವೇತನ ನೀಡಲು ಅವಕಾಶ ಇಲ್ಲ. ಈ ರೀತಿ ಆಗಿದ್ದರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಶೌಚಾಲಯ ನಿರ್ಮಾಣ:
‘ಆ.31ರೊಳಗೆ ಘನ ತ್ಯಾಜ್ಯ ವಿಲೇವಾರಿ ಘಟಕದ ಕಟ್ಟಡ ಪೂರ್ಣಗೊಳಿಸಬೇಕು. ಶೌಚಾಲಯ ಇರುವ ಪ್ರವಾಸಿ ತಾಣ ಮತ್ತು ಎಲ್ಲೆಲ್ಲಿ ನಿರ್ಮಿಸಬೇಕಿದೆ ಎಂಬ ಬಗ್ಗೆ ಮಾಹಿತಿ ನೀಡಬೇಕು. ಕಟ್ಟಡ ನಿರ್ಮಾಣಕ್ಕೆ ಸಮಸ್ಯೆಯಾದಲ್ಲಿ ಮೊಬೈಲ್ ಶೌಚಾಲಯ ನಿರ್ಮಿಸುವ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ನಾಗೇಶ್ ರಾಯ್ಕರ್ (ಆಡಳಿತ), ಎನ್.ಜಿ.ನಾಯ್ಕ (ಅಭಿವೃದ್ಧಿ), ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.