ಭಟ್ಕಳ: ಸಚಿವರಾದ ರಮಾನಾಥ ರೈ ಹಾಗೂ ಯು.ಟಿ ಖಾದರ್ ಅವರ ಕುಮ್ಮಕ್ಕಿನಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ನಡೆಯಿತು. ಈಗ ಭಟ್ಕಳದಲ್ಲೂ ಕೋಮುಗಲಭೆ ಸೃಷ್ಟಿಸಲು ಷಡ್ಯಂತ್ರ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವರ್ತಕ ರಾಮಚಂದ್ರ ನಾಯ್ಕ ಮನೆಗೆ ಮಂಗಳವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಭಟ್ಕಳ ಸೇರಿದಂತೆ ಕರಾವಳಿ ಜಿಲ್ಲೆಗಳು ಸೂಕ್ಷ್ಮ ಪ್ರದೇಶವಾಗಿ ಮಾರ್ಪಟ್ಟಿವೆ ಎಂದರು.
ಸೆ. 14ರಂದು ಪುರಸಭೆ ಅಧಿಕಾರಿಗಳ ಹಾಗೂ ಪೊಲೀಸರ ಕಣ್ಮುಂದೆಯೇ ಅಂಗಡಿಕಾರ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅಧಿಕಾರಿಗಳು ಆತನಿಗೆ ಅವಮಾನ ನೀಡಿ, ಪ್ರಚೋದಿಸಿ ವ್ಯವಸ್ಥಿತ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ಪರಿಹಾರಕ್ಕೆ ಆಗ್ರಹ: ಮೃತ ರಾಮಚಂದ್ರ ನಾಯ್ಕ ಅವರ ಕುಟುಂಬಕ್ಕೆ₹10 ಲಕ್ಷ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.