ಹೊಸಪೇಟೆ (ವಿಜಯನಗರ): ಬುಧವಾರ ರಾತ್ರಿಯಿಂದ ಸತತ ಸುರಿಯುತ್ತಿರುವ ಮಳೆಗೆ ಜಿಲ್ಲೆಯಾದ್ಯಂತ 25 ಮನೆಗಳ ಗೋಡೆ ಕುಸಿದು ಬಿದ್ದು ಹಾನಿಯಾಗಿದೆ.
ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ತಲುವಾಗಲು ಗ್ರಾಮದ ಮಲಿಯಮ್ಮ ದೇವಸ್ಥಾನ ಹಾಗೂ ಒಂಬತ್ತು ಮನೆಗಳಿಗೆ ನೀರು ನುಗ್ಗಿದೆ. ಹೂವಿನಹಡಗಲಿ ತಾಲ್ಲೂಕಿನ ಸೋವೇನಹಳ್ಳಿಯಲ್ಲಿ ಶಿವನಕಟ್ಟೇಶ್ವರ ದೇವಸ್ಥಾನದ ಗೋಡೆಯಲ್ಲಿ ಬಿರುಕು ಬಿಟ್ಟಿದೆ. ಕಟಾವು ಹಂತಕ್ಕೆ ಬಂದಿದ್ದ ನೂರಾರು ಎಕರೆ ಈರುಳ್ಳಿ, ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಕೂಡ್ಲಿಗಿ ತಾಲ್ಲೂಕಿನ ಹಾರಕಭಾವಿ ಸರ್ಕಾರಿ ಶಾಲೆ ಜಲಾವೃತವಾಗಿದೆ.
ಬುಧವಾರ ರಾತ್ರಿ ಆರಂಭಗೊಂಡ ಜಿಟಿಜಿಟಿ ಮಳೆ ಗುರುವಾರ ದಿನವಿಡೀ ಸುರಿಯಿತು. ಸತತ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜನಸಂಚಾರ ವಿರಳವಾಗಿತ್ತು. ಬಳ್ಳಾರಿ ಜಿಲ್ಲೆಯ ಸಂಡೂರು, ಸಿರುಗುಪ್ಪ, ಕುರುಗೋಡು, ಕಂಪ್ಲಿಯಲ್ಲೂ ಮಳೆಯಾಗಿದೆ.