ಹೊಸಪೇಟೆ (ವಿಜಯನಗರ): ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ನ. 6ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಒಟ್ಟು 7,865 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಣಿ ಮಾಡಿಸಿದ್ದಾರೆ.
ನ.6ರಂದು ಬೆಳಿಗ್ಗೆ 9.30ಕ್ಕೆ ಮೊದಲ ಪತ್ರಿಕೆಯ ಪರೀಕ್ಷೆ 14 ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 3,380 ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದಾರೆ. ಮಧ್ಯಾಹ್ನ 2ರಿಂದ ಎರಡನೇ ಪತ್ರಿಕೆಯ ಪರೀಕ್ಷೆಗೆ 4,485 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 18 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ.
ಪರೀಕ್ಷೆ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಅವರು ಗುರುವಾರ ಅಧಿಕಾರಿಗಳ ಸಭೆ ನಡೆಸಿದರು. ‘ಪರೀಕ್ಷಾ ಕೇಂದ್ರಗಳಿಗೆ ನೇಮಕಗೊಂಡ ಪರೀಕ್ಷಾ ನಿಯಂತ್ರಕ ಅಧಿಕಾರಿಗಳು, ಸೂಪರಿಟೆಂಡೆಂಟ್ಗಳು ಸೇರಿದಂತೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸರ್ಕಾರ ನಿರ್ದೇಶಿಸಿರುವ ಪರೀಕ್ಷಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಓದಿಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಆಸನದ ವ್ಯವಸ್ಥೆ, ಕುಡಿಯುವ ನೀರು, ಗಾಳಿ-ಬೆಳಕು, ಶೌಚಾಲಯ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಪರೀಕ್ಷೆಗೆ ನಿಯೋಜನೆಗೊಂಡ ನಿಯಂತ್ರಣಾಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಮುಂಚಿತವಾಗಿ ಭೇಟಿ ನೀಡಿ, ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಟಿಇಟಿ ಪರೀಕ್ಷಾ ಮಾರ್ಗ ಅಧಿಕಾರಿಗಳಾಗಿ ನೇಮಕಗೊಂಡವರು ಮುಂಚಿತವಾಗಿ ಮಾರ್ಗದಲ್ಲಿ ಸಂಚರಿಸಿ ಪರೀಕ್ಷಾ ದಿನದಂದು ಪರೀಕ್ಷಾ ಸಾಮಗ್ರಿಗಳ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಪರೀಕ್ಷೆಯ ದಿನ ಎಲ್ಲ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯವರು ವೈದ್ಯಕೀಯ ಸೇವೆ ಕಲ್ಪಿಸಬೇಕು. ಪರೀಕ್ಷೆಯ ಬಂದೋಬಸ್ತ್ಗಾಗಿ ಬೆಂಗಾವಲು ವಾಹನಗಳ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಏನಾದರೂ ಅಹಿತಕರ ಘಟನೆಗಳು ನಡೆದರೆ ಕಂಟ್ರೋಲ್ ರೂಂ ಸಂಖ್ಯೆ 112ಗೆ ಕರೆ ಮಾಡಿ ತಿಳಿಸಬೇಕು ಎಂದರು.
ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅನ್ನದಾನಯ್ಯ ಸ್ವಾಮಿ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಡಿಡಿಪಿಐ ಜಿ.ಕೊಟ್ರೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಬಿಇಒಗಳು, ಪರೀಕ್ಷಾ ಸೂಪರಿಟೆಂಡೆಂಟ್ಗಳು ಇದ್ದರು.