ಕೊಟ್ಟೂರು: ಪಟ್ಟಣದ ಕೋಟೆ ಪ್ರದೇಶದಲ್ಲಿರುವ ಪೂರ್ವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಗದ್ಗುರು ರೇಣುಕ ಭಗವತ್ಪಾದರ ಹಾಗೂ ವೀರಭದ್ರೇಶ್ವರ ಸ್ವಾಮಿ ಜೋಡಿ ರಥೋತ್ಸವ ಶುಕ್ರವಾರ ನಡೆಯುವ ಹಿನ್ನೆಲೆಯಲ್ಲಿ ಗುರುವಾರ ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಬೆಳಗಿನ ಜಾವ ಅರ್ಚಕರು ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದಂತೆ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಸಕಲ ಮಂಗಲವಾದ್ಯಮೇಳಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತೆರಳಿ ಗಂಗಾಪೂಜೆ ನೆರವೇರಿಸಲಾಯಿತು.
ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಿದ್ದ ಅಗ್ನಿಕುಂಡಕ್ಕೆ ಪೂಜೆ ನೆರವೇರಿಸುತ್ತಿದ್ದಂತೆ ಹರಕೆ ಹೊತ್ತ ಭಕ್ತರು ತಮ್ಮ ಹರಕೆಯನ್ನು ತೀರಿಸಲು ಪುರವಂತರಿಂದ ಬಾಯಿ,ಕೈಗಳಿಗೆ ಶಸ್ತ್ರಗಳಿಂದ ಚುಚ್ಚಿಸಿಕೊಂಡು ಅಗ್ನಿಕುಂಡ ಪ್ರವೇಶಿಸುವ ಮುಖಾಂತರ ತಮ್ಮ ಭಕ್ತಿ ಸಮರ್ಪಿಸಿದರು.
ಗುಗ್ಗಳ ಕಾರ್ಯಕ್ರಮದ ನಂತರ ರುದ್ರಭೋಜನ ಹಾಗೂ ನೆರದ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. 22 ರಂದು ಶುಕ್ರವಾರ ಬೆಳಿಗ್ಗೆ ವೀರಭದ್ರೇಶ್ವರ ಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಯ ವಿವಾಹ ಹಾಗೂ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಗುತ್ತದೆ ಸಂಜೆ ಜೋಡಿ ರಥೋತ್ಸವ ಜರುಗಲಿವೆ. 23 ರಂದು ಶನಿವಾರ ರಾತ್ರಿ ಮದಾಲ್ಸಿ ಕಾರ್ಯಕ್ರಮದೊಂದಿಗೆ ರಥೋತ್ಸವ ಸಂಪನ್ನಗೊಳ್ಳಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.