ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಖಾಸಗಿ ವಲಯಕ್ಕೂ ವಿಸ್ತರಿಸಬೇಕೆಂದು ಆಗ್ರಹಿಸಿ ಮೀಸಲಾತಿ ಹೆಚ್ಚಳದ ಜಾರಿಗಾಗಿ ಮತ್ತು ಖಾಸಗಿ ಕ್ಷೇತ್ರದಲ್ಲೂ ಎಸ್ಸಿ/ಎಸ್ಟಿ/ಒಬಿಸಿ ಮೀಸಲಾತಿ ವಿಸ್ತರಣೆಗಾಗಿ ಹೋರಾಟ ವೇದಿಕೆಯವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ಕಾರದಿಂದ ಶೇ 2ರಷ್ಟು ಹುದ್ದೆಗಳನ್ನು ತುಂಬಲಾಗುತ್ತಿದೆ. ಶೇ 98ರಷ್ಟು ಉದ್ಯೋಗಾವಕಾಶಗಳು ಖಾಸಗಿ ವಲಯದಲ್ಲಿವೆ. ಖಾಸಗಿ ವಲಯಕ್ಕೆ ಮೀಸಲಾತಿ ಸೌಲಭ್ಯ ಒದಗಿಸಿದರೆ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಟ್ಟಂತಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದರು.
ಸುಗ್ರೀವಾಜ್ಞೆ ಮೂಲಕ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಿಸಲಾಗಿದೆ. ಸಾಂವಿಧಾನಿಕ, ಕಾನೂನಿನ ತೊಡಕು ಎದುರಾಗದಂತೆ ಅದನ್ನು ಜಾರಿಗೊಳಿಸಬೇಕು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2 ಲಕ್ಷದ 80 ಸಾವಿರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಅನೇಕ ವರ್ಷಗಳಿಂದ ಭರ್ತಿ ಮಾಡದೆ ಇರುವ ಎಸ್ಸಿ/ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳನ್ನು ತುರ್ತಾಗಿ ತುಂಬಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 40 ಲಕ್ಷ ಹುದ್ದೆಗಳನ್ನು ಭರ್ತಿಮಾಡಬೇಕು. ಎಸ್ಸಿ/ಎಸ್ಟಿ/ಒಬಿಸಿ ಸಮುದಾಯದ ಎಲ್ಲ ನಿರುದ್ಯೋಗಿ ಯುವಜನರಿಗೆ ಸರ್ಕಾರ ಉದ್ಯೋಗ ಕಲ್ಪಿಸಬೇಕು. ಉದ್ಯೋಗ ಕೊಡುವ ತನಕ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.