ಹೊಸಪೇಟೆ (ವಿಜಯನಗರ): ‘ಪರ್ಸಂಟೇಜ್ ಸಿಕ್ಕರೆ ಮಾತ್ರ ಬಿಜೆಪಿಯವರು ಕೆಲಸ ಮಾಡುತ್ತಾರೆ’ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಆರೋಪಿಸಿದರು.
ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮು ರಾಜಕಾರಣಕ್ಕೆ ಭವಿಷ್ಯವಿಲ್ಲ. ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಲು ಮುಂದಾಗಿದೆ. ಆದರೆ, ರಾಜ್ಯದಲ್ಲಿ ಅವರ ಆಟ ನಡೆಯುವುದಿಲ್ಲ. ಚುನಾವಣೆಗೂ ಮುನ್ನ ಬಿಜೆಪಿ ಜನರ ಸಾವಿನಲ್ಲಿ ರಾಜಕೀಯ ಮಾಡುತ್ತದೆ. ಚುನಾವಣೆ ಮುಗಿದ ನಂತರ ಅದರ ಬಗ್ಗೆ ಮಾತಾಡುವುದಿಲ್ಲ ಎಂದು ಹೇಳಿದರು.
ಅಭಿವೃದ್ಧಿ ಬಗ್ಗೆ ಮಾತನಾಡಬೇಡಿ. ‘ಲವ್ ಜಿಹಾದ್’ ಬಗ್ಗೆ ಮಾತಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಅವರ ಪಕ್ಷದವರಿಗೆ ಹೇಳಿದ್ದಾರೆ. ಮಾನ, ಮರ್ಯಾದೆ ಬಿಟ್ಟವರು ಹೀಗೆ ಮಾತಾಡುತ್ತಾರೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದಾಗ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾಗ ಕಟೀಲ್ಗೆ ಅವರ ಪಕ್ಷದ ಕಾರ್ಯಕರ್ತರೇ ಧಿಕ್ಕಾರ ಹಾಕಿದ್ದರು ಎಂದರು.
ಎಲ್ಲ ಜಿಲ್ಲೆಗಳಲ್ಲಿ ಒಬಿಸಿ ಸಮಾವೇಶ
ನಾನು ಕಾಂಗ್ರೆಸ್ ಪಕ್ಷದ ಒಬಿಸಿ ಘಟಕದ ರಾಜ್ಯ ಅಧ್ಯಕ್ಷನಾದ ಬಳಿಕ ಒಂದೂವರೆ ತಿಂಗಳಲ್ಲಿ ರಾಜ್ಯದ 27 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸುವ ಕೆಲಸ ಮಾಡಿದ್ದೇನೆ. ರಾಜ್ಯದಲ್ಲಿ ಶೇ 55ರಷ್ಟು ಹಿಂದುಳಿದ ವರ್ಗದವರು ಇದ್ದಾರೆ. ಅವರನ್ನು ರಾಜಕೀಯವಾಗಿ ಮುಖ್ಯವಾಹಿನಿಗೆ ತರುವುದರ ಮೂಲಕ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಬರುವ ದಿನಗಳಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಗಳ ಸಮಾವೇಶ ಆಯೋಜಿಸಲು ತೀರ್ಮಾನಿಸಿದೆ. ಕೊನೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ಭಾಗವಹಿಸುವರು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು ಈ ಸಲ ಇಡೀ ರಾಜ್ಯಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಅದರೊಂದಿಗೆ ಆಯಾ ವಿಧಾನಸಭಾ ಕ್ಷೇತ್ರಗಳ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಪ್ರಣಾಳಿಕೆ ಸಹ ಬಿಡುಗಡೆಗೊಳಿಸಲು ತೀರ್ಮಾನಿಸಿದೆ. ಈಗಾಗಲೇ ಆ ಪ್ರಕ್ರಿಯೆ ಆರಂಭವಾಗಿದೆ. ಜನರ ಬೇಕು, ಬೇಡ, ಅಗತ್ಯತೆಗೆ ತಕ್ಕಂತೆ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಜನರಿಗೆ ಕೊಟ್ಟ ಬಹುತೇಕ ಭರವಸೆಗಳನ್ನು ಈಡೇರಿಸಿತ್ತು. ನಾಲ್ಕು ವರ್ಷಗಳಲ್ಲಿ ಬಿಜೆಪಿ ಶೇ 5ರಷ್ಟು ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಪರ್ಸಂಟೇಜ್ ಸಿಕ್ಕರಷ್ಟೇ ಬಿಜೆಪಿಯವರು ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.