ಹೊಸಪೇಟೆ (ವಿಜಯನಗರ): ‘ತಾಲ್ಲೂಕಿನ ಕಮಲಾಪುರ ಸಮೀಪದ ‘ಆರೆಂಜ್ ಕೌಂಟಿ’ (ಎವೊಲ್ವ್ ಬ್ಲ್ಯಾಕ್) ಐಷಾರಾಮಿ ಹೋಟೆಲ್ನ 18 ಜನ ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿರುವುದರಿಂದ ಅದನ್ನು ಸೀಲ್ಡೌನ್ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ತಿಳಿಸಿದ್ದಾರೆ.
‘ಹೋಟೆಲ್ನ 18 ಜನರ ಸಂಪರ್ಕಕ್ಕೆ ಒಳಪಟ್ಟಿದ್ದ 100 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 28 ಜನರಲ್ಲಿ ಕೋವಿಡ್ ದೃಢಪಟ್ಟಿದೆ. ಕಾರಿಗನೂರಿನ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗೆ ಕೋವಿಡ್ ಬಂದಿರುವುದರಿಂದ ಐದು ದಿನ ಶಾಲೆಗೆ ರಜೆ ಘೋಷಿಸಲಾಗಿದೆ. ಕೋವಿಡ್ ಪ್ರಕರಣಗಳನ್ನು ಆಧರಿಸಿ ಶಾಲೆಗಳನ್ನು ನಡೆಸಬೇಕೋ ಅಥವಾ ಇಲ್ಲವೋ ಎನ್ನುವುದರ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು’ ಎಂದು ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಲಾಗಿದೆ. ಮಾಸ್ಕ್, ಅಂತರ ಕಾಯ್ದುಕೊಳ್ಳುವಿಕೆ, ವೀಕೆಂಡ್ ಕರ್ಫ್ಯೂ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ವಾಟ್ಸ್ಆ್ಯಪ್ ಗ್ರೂಪ್ ರಚಿಸಿದ್ದು, ಅದರ ಮೂಲಕ ಸೋಂಕಿತರ ಆರೋಗ್ಯ ನಿತ್ಯ ವಿಚಾರಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.