ಹೊಸಪೇಟೆ (ವಿಜಯನಗರ): ‘ಆಡಳಿತ ಪಕ್ಷದವರ ಬೇಜವಾಬ್ದಾರಿಯಿಂದ ಕೋವಿಡ್ ಎರಡನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವು–ನೋವು ಆಗಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದರು.
‘ಎರಡನೇ ಅಲೆ ಬರುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದರೂ ಸಹ ಅದನ್ನು ಲೆಕ್ಕಿಸದೆ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ ಅವರು ಬೇಜವಾಬ್ದಾರಿಯಿಂದ ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಚುನಾವಣಾ ರ್ಯಾಲಿ ನಡೆಸಿದರು. ಪ್ರಚಾರ ಸಭೆಗಳಲ್ಲಿ ಲಕ್ಷಾಂತರ ಜನ ಸೇರಿದ್ದರಿಂದಲೇ ಕೊರೊನಾ ವ್ಯಾಪಕವಾಗಿ ಹರಡಿತು’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಕೋವಿಡ್ನಿಂದ ಮೃತಪಟ್ಟಿರುವವರ ಕುರಿತು ಸರ್ಕಾರ ಕೊಟ್ಟಿರುವ ಅಂಕಿ ಅಂಶಕ್ಕಿಂತ ಆರು ಪಟ್ಟು ಹೆಚ್ಚು ಜನರ ಸಾವು ಸಂಭವಿಸಿದೆ. ಸರ್ಕಾರ ತನ್ನ ವೈಫಲ ಮುಚ್ಚಿಟ್ಟುಕೊಳ್ಳಲು ಮೃತರ ವಾಸ್ತವ ಸಂಖ್ಯೆ ಮುಚ್ಚಿಟ್ಟಿದೆ’ ಎಂದರು.
‘ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲೂ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕ ಸೋಮಶೇಖರ್ ರೆಡ್ಡಿ ಸಾವಿರಾರು ಜನರನ್ನು ಸೇರಿಸಿ ಪ್ರಚಾರ ನಡೆಸಿದರು. ಇದು ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಲ್ಲವೇ?’ ಎಂದು ಪ್ರಶ್ನಿಸಿದರು.
‘ರಾಷ್ಟ್ರ ಸಮಿತಿ ಪಕ್ಷ ಬಲಪಡಿಸಲು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿರುವೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಾಲ್ಲೂಕುವಾರು ಘಟಕಗಳನ್ನು ರಚಿಸಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಯ ಎಲ್ಲ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ತಿಳಿಸಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಎಚ್. ಲಿಂಗೇಗೌಡ, ಜಂಟಿ ಕಾರ್ಯದರ್ಶಿ ವಿಜಯಕುಮಾರ್, ಜಿಲ್ಲಾ ಅಧ್ಯಕ್ಷ ರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಪ.ಯ.ಗಣೇಶ್, ಮಾಲ್ತೇಶ್ ಇದ್ದರು.