ಹೊಸಪೇಟೆ (ವಿಜಯನಗರ): ಕೋವಿಡ್ ಸಂಕಷ್ಟದ ಸಮಯದಲ್ಲಿ ನಗರಸಭೆ ಆಸ್ತಿ ತೆರಿಗೆ ಹೆಚ್ಚಿಸಿರುವ ಕ್ರಮ ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕೆಂದು ವಿಜಯನಗರ ನಾಗರಿಕ ವೇದಿಕೆ, ವಿನಾಯಕ ನಗರ ಕ್ಷೇಮಾಭಿವೃದ್ದಿ ಸಂಘ ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗಳು ಆಗ್ರಹಿಸಿವೆ.
ಈ ಸಂಬಂಧ ಸಂಘಟನೆಗಳ ಮುಖಂಡರು ಮಂಗಳವಾರ ನಗರದಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
‘ಸರ್ಕಾರವು ಯಾವುದೇ ವಿವೇಚನೆ ಇಲ್ಲದೆ ತೆರಿಗೆ ಏರಿಕೆ ಮಾಡಿರುವುದು ಖಂಡನಾರ್ಹ. ಒಂದುವರೆ ವರ್ಷದಿಂದ ಕೋವಿಡ್ನಿಂದ ಜನ ಸಂಕಷ್ಟದಲ್ಲಿದ್ದಾರೆ. ದೈನಂದಿನ ಬದುಕು ನಡೆಸುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತೆರಿಗೆ ಹೆಚ್ಚಿಸಿ, ಜನಸಾಮಾನ್ಯರ ಮೇಲೆ ಬರೆ ಎಳೆದಿರುವುದು ಸರಿಯಲ್ಲ’ ಎಂದು ಟೀಕಿಸಿದ್ದಾರೆ.
‘ಸಾರ್ವಜನಿಕರಿಂದ ಅಭಿಪ್ರಾಯ ಪಡೆದುಕೊಳ್ಳದೆ, ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡದೆ ಏಕಪಕ್ಷೀಯವಾಗಿ ತೆರಿಗೆ ಹೆಚ್ಚಿಸಿರುವ ಕ್ರಮ ನ್ಯಾಯೋಚಿತವಲ್ಲ. ನಗರಸಭೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಇಲ್ಲದೇ ಇರುವಾಗ ತೆರಿಗೆ ಹೆಚ್ಚಿಸುವಂತಿಲ್ಲ. ಆಡಳಿತಾಧಿಕಾರಿಗಳ ನಿಯಂತ್ರಣದಲ್ಲಿದ್ದಾಗ ತೆರಿಗೆ ಹೆಚ್ಚಿಸುವುದು ಜನತಂತ್ರಕ್ಕೆ ವಿರುದ್ಧವಾದ ಕೆಲಸ’ ಎಂದು ಆರೋಪಿಸಿದ್ದಾರೆ.
‘ಲಾಕ್ಡೌನ್ನಿಂದ ಸಾವಿರಾರು ಜನ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ವ್ಯಾಪಾರ ವಹಿವಾಟು ಇಲ್ಲದಂತಾಗಿದೆ. ಜನಸಂಖ್ಯೆಯ ಶೇಕಡ 70ರಷ್ಟು ಮಧ್ಯಮ ವರ್ಗ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ನಿರ್ದಿಷ್ಟ ಆದಾಯವಿಲ್ಲದೇ ಅತಂತ್ರರಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ತೆರಿಗೆ ಹೆಚ್ಚಿಸಿದ್ದು ಸರಿಯಲ್ಲ. ಕೂಡಲೇ ತನ್ನ ನಿರ್ಧಾರ ಹಿಂಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.