ಹಗರಿಬೊಮ್ಮನಹಳ್ಳಿ: ‘ಯಾವುದೇ ಮಗು ಶಾಲೆಯಿಂದ ಹೊರಗೆ ಉಳಿಯದಂತೆ, 5ವರ್ಷ 10ತಿಂಗಳು ತುಂಬಿರುವ ಎಲ್ಲ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲೆ ಮಾಡಿಸಿಕೊಳ್ಳಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ.ಆನಂದ ಹೇಳಿದರು.
ಪಟ್ಟಣದ ಬಿಇಒ ಕಚೇರಿಯಲ್ಲಿ ನಡೆದ ಮುಖ್ಯ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ‘ಪಾಲಕರು ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವುದಕ್ಕೆ ಉತ್ತಮ ಶಿಕ್ಷಣ ಕೊಡಿಸಬೇಕು. 31ರಂದು ಶಾಲೆಗಳು ಪ್ರಾರಂಭವಾಗುತ್ತಿದ್ದು ಸಿಹಿ ಊಟದ ಜತೆಗೆ ಉಚಿತವಾಗಿ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಗುವುದು’ ಎಂದರು.
ಶಾಲೆಗಳ ಕೊಠಡಿಗಳನ್ನು ಸ್ವಚ್ಛಗೊಳಿಸಿ, ಸುಣ್ಣಬಣ್ಣ ಬಳಿಸುವಂತೆ ಶಿಕ್ಷಕರಿಗೆ ಸೂಚಿಸಿದರು. ಶಾಲೆಗಳ ಆರಂಭದಲ್ಲಿ ಸೇತುಬಂಧ ಕಾರ್ಯಕ್ರಮ ಅನುಷ್ಠಾನ ಮಾಡುವುದರೊಂದಿಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪರಿಹಾರ ಬೋಧನೆಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿಸುವುದರಿಂದ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣದ ಜತೆಗೆ ವಿದ್ಯಾರ್ಥಿವೇತನ ಸಹಿತ ಹಲವು ಸೌಲಭ್ಯಗಳು ದೊರೆಯುತ್ತವೆ. ಎಲ್ಲ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ ಎಂದರು.